ಕಮತಗಿಯಲ್ಲಿ ನಡೆದ ಉಪಚುನಾವಣೆ ಪ್ರಚಾರ ಸಭೆಯಲ್ಲಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರಂತರ ಪ್ರಚಾರವನ್ನು ಹಾಸ್ಯಾಸ್ಪದ ಎಂದು ಟೀಕಿಸಿದರು. ರೈತರ ಸಂಕಷ್ಟವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಕಮತಗಿ (ಏ.7): ಈ ನಾಡಿನ ಜನತೆಗಾಗಿ ಬಿಜೆಪಿ ಜೆಡಿಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಮತ್ತು ಬಿ.ಎಸ್.ಯಡಿಯೂರಪ್ಪನವರು ಸೇರಿಕೊಂಡು ಸಾಕಷ್ಟು ಕಾರ್ಯಕ್ರಮ ನೀಡಿದ್ದೇವೆ. ಆದರೆ ಅವುಗಳ ಕುರಿತು ಪ್ರತಿ ದಿನ ಜನರ ಮುಂದೆ ಹೇಳುವುದಕ್ಕೆ ಹೋಗಿಲ್ಲ. ಅದು ನಮ್ಮ ಕರ್ತವ್ಯ. ಕಾಂಗ್ರೆಸ್‌ನವರು ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿ ದಿನ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Add Asianetnews Kannada as a Preferred SourcegooglePreferred

ಪಟ್ಟಣದಲ್ಲಿನ ಬಸ್ ನಿಲ್ದಾಣದ ಹತ್ತಿರದ ಆವರಣದಲ್ಲಿ ಭಾನುವಾರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದು ಹೇಳುವುದನ್ನು ಬಿಟ್ಟರೆ ಇನ್ಯಾವುದೇ ಬಡವರ ಪರವಾದ ಯೋಜನೆ ಜಾರಿ ಬಗ್ಗೆ ಎಲ್ಲಿಯೂ ಹೇಳಿಲ್ಲ. ರಾಜ್ಯದ ಅನೇಕ ಕಡೆ ಆಲಿಕಲ್ಲು ಮಳೆಯಿಂದ ದ್ರಾಕ್ಷಿ, ದಾಳಿಂಬೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜಮೀನುಗಳಿಗೆ ತೆರಳಿ ಸಾಂತ್ವನ ಹೇಳದ ಮುಖಮಂತ್ರಿಗಳು, ಐದು ದಿನಗಳಿಂದ ಪ್ರಚಾರದಲ್ಲಿ ಬ್ಯುಜಿಯಾಗಿದ್ದಾರೆ ಎಂದು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದ ಜನರಿಗೆ, ರೈತರಿಗೆ, ನೇಕಾರರಿಗೆ ಕೊಟ್ಟ ಭರವವೆಯಂತೆ ಕೆಲಸ ಮಾಡಿದ್ದರೆ ಇವತ್ತು ಮನೆ ಮನೆಗಳಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ನಮ್ಮ ಸರಕಾರದ ಅವಧಿಯಲ್ಲಿ ನೇಕಾರರು ಹಾಗೂ ರೈತರಿಗೆ ಜಾರಿಗೆ ತಂದಿದ್ದ ಯೋಜನೆಗಳು ಹಾಗೂ ಭಾಗ್ಯಲಕ್ಷ್ಮೀ ಯೋಜನೆ ಬಂದ್‌ ಮಾಡಿದ್ದೀರಿ. ತಾವು ಇಲ್ಲೇ 3-4 ದಿನ ಉಳಿದರೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ₹10 ಸಾವಿರಕ್ಕೂ ಅಧಿಕಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ, ಮಲ್ಲೇಶ ಬಾಬು, ರಾಜ್ಯಸಭಾ ಸದಸ್ಯ ನಾರಾಯಣಸಾಬ ಬಾಂಡಗೆ, ಶಾಸಕ ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಿ.ಸಿ. ಪಾಟೀಲ, ಜನಾರರ್ದನರೆಡ್ಡಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ, ಎಂ.ಡಿ. ಲಕ್ಷ್ಮೀನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.