ತಾವು ಯಾವುದೇ ಅಪರಾಧ ಕೃತ್ಯವನ್ನು ಎಸಗಿಲ್ಲ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹುರುಳಿಲ್ಲ. ದೂರಿನ ಅಂಶಗಳು ಕಟ್ಟುಕತೆಯಂತಿದೆ. ಆದ್ದರಿಂದ ಎಫ್‌ಐಆ‌ರ್ ರದ್ದುಪಡಿಸಬೇಕು ಎಂದು ಕೋರಿದ ರೇವಣ್ಣ  

ಬೆಂಗಳೂರು(ಮೇ.29): ಮಹಿಳೆ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಮನೆಕೆಲಸದಾಕೆಯನ್ನು ಅಪಹರಿಸಿದ ಆರೋಪಸಂಬಂಧ ಮೈಸೂರು ಜಿಲ್ಲೆಯ ಕೆ.ಆರ್.ನಗರ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆ‌ರ್ ಗಳನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಪ್ರಕರಣದ ಮೊದಲ ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಈ ಸಂಬಂಧ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಕೋರಿ ರೇವಣ್ಣ 2 ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ತಾವು ಯಾವುದೇ ಅಪರಾಧ ಕೃತ್ಯವನ್ನು ಎಸಗಿಲ್ಲ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹುರುಳಿಲ್ಲ. ದೂರಿನ ಅಂಶಗಳು ಕಟ್ಟುಕತೆಯಂತಿದೆ. ಆದ್ದರಿಂದ ಎಫ್‌ಐಆ‌ರ್ ರದ್ದುಪಡಿಸಬೇಕು ಎಂದು ರೇವಣ್ಣ ಕೋರಿದ್ದಾರೆ. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೂ ಎಫ್‌ಐಆರ್, ಪ್ರಕರಣದ ತನಿಖೆ ಹಾಗೂ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. 

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ: ಇಬ್ಬರು ಕಾಂಗ್ರೆಸ್ಸಿಗರ ಬಂಧನ

ಜಾಮೀನು ರದ್ದತಿಗೆ ಎಸ್‌ಐಟಿ ಅರ್ಜಿ: ಮತ್ತೊಂದೆಡೆ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆ‌ರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೇವಣ್ಣಗೆ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟು ಮೇ 13ರಂದು ಹೊರಡಿಸಿದ ತೀರ್ಪು ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಎಲ್ಲಾ ಅರ್ಜಿ ಶೀಘ್ರ ವಿಚಾರಣೆಗೆ ಬರುವ ಸಾಧ್ಯತೆಯಿದೆ.