* ರಾಜ್ಯದಲ್ಲಿ ಒಟ್ಟು 1,763 ವೈದ್ಯರ ನೇಮಕಾತಿ ಪೂರ್ಣ* ಈ ಹೊಸ ವೈದ್ಯರಿಗೆ ಮಹತ್ವದ ಕರೆ ಕೊಟ್ಟ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ * ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ದೊರೆಯುವಂತೆ ಕಾರ್ಯನಿರ್ವಹಿಸಿ ಎಂದು ಕರೆ

ಬೆಂಗಳೂರು (ಜೂನ್.02): ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯುವ ಮಟ್ಟಿಗೆ ಕೆಲಸ ಮಾಡಿ, ಸರ್ಕಾರಿ ಆಸ್ಪತ್ರೆಗಳ ಬಗೆಗಿನ ಜನರ ಮನೋಧೋರಣೆ ಬದಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೊಸ ವೈದ್ಯರಿಗೆ ಕರೆ ಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಆರೋಗ್ಯ ಇಲಾಖೆಯಿಂದ 715 ಹಿರಿಯ ತಜ್ಞರು, 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1,763 ವೈದ್ಯರ ನೇಮಕ ಪೂರ್ಣಗೊಂಡಿದ್ದು, ನೂತನ ವೈದ್ಯರನ್ನು ಉದ್ದೇಶಿಸಿ, ಆನ್ ಲೈನ್ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆ ಐತಿಹಾಸಿಕ ರೀತಿಯಲ್ಲಿ ರಾಜ್ಯ ಸರ್ಕಾರವು ಕೇವಲ ಐದಾರು ತಿಂಗಳಲ್ಲಿ ವೈದ್ಯರ ನೇರ ನೇಮಕ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಗುಣಮಟ್ಟದ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವುದಿಲ್ಲ ಎಂಬ ಭಾವನೆ ಜನರಲ್ಲಿದೆ. ಆದರೆ ವಾಸ್ತವವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹಳಷ್ಟು ಮೂಲಸೌಕರ್ಯವಿದೆ. ಹೊಸ ವೈದ್ಯರು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ, ಆ ಆಸ್ಪತ್ರೆಯನ್ನು ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದರು.

 ಕಾರ್ಪೊರೇಟ್ ವಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸಿ, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಂಕಲ್ಪ ತೊಡಬೇಕು. ಸರ್ಕಾರಿ ಆಸ್ಪತ್ರೆಗೆ ಬಡವರು, ಕೆಳ ಮಧ್ಯಮ ವರ್ಗದ ಜನರು ಬರುತ್ತಾರೆ. ಇಂತಹವರು ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡಬಾರದೆಂದು ಸರ್ಕಾರ ಉಚಿತ ಸೇವೆ ನೀಡುತ್ತಿದೆ. ಈ ಸೇವೆಯನ್ನು ಜನರಿಗೆ ತಲುಪಿಸುವ ಸೇತುವೆಯಾಗಿ ವೈದ್ಯರು ಕಾರ್ಯನಿರ್ವಹಿಸಬೇಕು ಎಂದರು.

1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ದೇಶದಲ್ಲಿ 1,511 ಮಂದಿಗೆ ಒಬ್ಬ ಅಲೋಪತಿ ವೈದ್ಯ ಇದ್ದಾರೆ ಎಂದು 15ನೇ ವೇತನ ಆಯೋಗ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ವೈದ್ಯರ ನೇಮಕ ಮಾಡಿರುವುದು ಸಕಾಲಿಕವಾಗಿದೆ. ಕೋವಿಡ್ ಪರಿಸ್ಥಿತಿಯಿಂದಾಗಿ, ಈಗ ವೈದ್ಯರು ಕೇವಲ ವೈದ್ಯರಾಗಿ ಉಳಿಯದೆ ಯೋಧರಾಗಿ ಬದಲಾಗಿದ್ದಾರೆ. ವೈದ್ಯರು ಸಮಾಜಶಾಸ್ತ್ರಜ್ಞ, ಆಡಳಿತಾಧಿಕಾರಿ, ನೀತಿ ನಿರೂಪಕರು, ಮಾನಸಿಕ ತಜ್ಞರಾಗಿ ಅನೇಕ ಪಾತ್ರಗಳನ್ನು ವಹಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ 2,508 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 204 ಸಮುದಾಯ ಆರೋಗ್ಯ ಕೇಂದ್ರಗಳಿವೆ. ಹಳ್ಳಿಗಳಲ್ಲಿ ಕಡ್ಡಾಯ ಸೇವೆ ಸಲ್ಲಿಸುವ ಕಾನೂನು ಹೇರಿಕೆಗೆ ಅವಕಾಶ ನೀಡದೆ ವೈದ್ಯರು ಈ ಭಾಗಗಳಲ್ಲಿ ಕೆಲಸ ಮಾಡಿದರೆ, ಹಳ್ಳಿ ಜನರು ಆರೋಗ್ಯ ಸೇವೆಗಾಗಿ ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವೇ ಇರುವುದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.