ರಾಜ್ಯದ ಹಲವೆಡೆ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದ್ದು, ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದ್ದು, ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕುಮಟಾ, ಹೊನ್ನಾವರ ತಾಲೂಕಿನಲ್ಲಿ 12 ಕಾಳಜಿ ಕೇಂದ್ರ ತೆರೆದು 263 ಜನರು ಆಶ್ರಯ ಪಡೆದಿದ್ದಾರೆ.

Add Asianetnews Kannada as a Preferred SourcegooglePreferred

 ಮೂಲ್ಕಿ ತಾಲೂಕು ವ್ಯಾಪ್ತಿ ಭಾರಿ ಗಾಳಿ, ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ತಂದೆ ಮಗಳು ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಾವಿರಕ್ಕೂ ಅಧಿಕ ಅಡಕೆ ಮರ ಧರಾಶಾಹಿಯಾಗಿದೆ. ಶಿವಮೊಗ್ಗದಲ್ಲಿ ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ 40 ಸಾವಿರ ಕ್ಯುಸೆಕ್‌ ನೀರು ಹರಿದು ಬಂದಿದೆ. ಕೆಲವೆಡೆ ಮನೆಯ ಗೋಡೆಗಳು, ದನದ ಕೊಟ್ಟಿಗೆ ನೆಲಸಮವಾಗಿದೆ. ಚಿಕ್ಕಮಗಳೂರಿನ ಕೆಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕೆಲ ಜಿಲ್ಲೆಗಳು ಹಾೂ ತಾಲೂಕುಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಕಾರಣದಿಂದ ರಾಜ್ಯದ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ಶುಕ್ರವಾರ (ಜು.26) ರಜೆ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸದಂತೆ ಸೂಚಿಸಲಾಗಿದೆ.

ಕೊಡುಗು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಭಾರಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ (ಜು.26) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಕಷ್ಟು ಕಡೆಗಳಲ್ಲಿ ರಸ್ತೆಗಳಿಗೆ ಮರಗಳು ಉರುಳುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಭಾರಿ ಮಳೆ ಕಾರಣ ನಾಳೆ (ಜು.26) ಕ್ಕೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಏಳು ತಾಲೂಕಿನ ಅಂಗನವಾಡಿ, ಶಾಲಾ- ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ನದಿ ಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಹಲೆವೆಡೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಹೊನ್ನಾವರ ಹಾಗೂ ಕುಮಟ ಸೇರಿ ಒಟ್ಟು 6 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.