ಮಳೆಯಿಂದಾಗಿ ಕೊಡಗು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ಈ ಮಧ್ಯೆ, ಮಳೆ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಉಡುಪಿ, ಮಂಗಳೂರು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. 

ಬೆಂಗಳೂರು(ಡಿ.03): ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಈ ಮಧ್ಯೆ, ರಾಜಧಾನಿ ಬೆಂಗಳೂರು, ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಅದರಲ್ಲೂ ವಿಶೇಷವಾಗಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಸೋಮವಾರ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ 9 ಜಿಲ್ಲೆಗಳ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಿಸಲಾಗಿದೆ. 

Add Asianetnews Kannada as a Preferred SourcegooglePreferred

ಮಳೆಯಿಂದಾಗಿ ಕೊಡಗು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ಈ ಮಧ್ಯೆ, ಮಳೆ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಉಡುಪಿ, ಮಂಗಳೂರು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. 
ಈ ಮಧ್ಯೆ, ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಬರುವ ತಾಳುಬೆಟ್ಟದ ತಿರುವಿನಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಭಕ್ತರು ಪರದಾಡುವಂತಾಯಿತು. 

ಫೆಂಗಲ್ ಎಫೆಕ್ಟ್ ಕೊಡಗು ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ; ಆತಂಕದಲ್ಲಿ ಕಾಫಿ ಬೆಳೆಗಾರರು!

ಇದೇ ವೇಳೆ, ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೆಳಗ್ಗೆ ಮನೆಯ ಗೋಡೆಯೊಂದು ಕುಸಿದಿದ್ದು, ಮನೆಯೊಳ ಗಿದ್ದಮೂರು ಮಂದಿ ಅದೃಷ್ಟವಶಾತ್ ಪಾರಾಗಿದ್ದಾರೆ. ಕಲ್ಕಾರ್‌ಶೀಟ್ ಮನೆಯಾಗಿರುವುದರಿಂದ ಮನೆಯ ಒಂದು ಭಾಗದ ಗೋಡೆ ಕುಸಿದು ಹಾನಿಯಾಗಿದೆ. 

ಕರಾವಳಿ ಭಾಗದಲ್ಲೂ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕು ತೊಕ್ಕೊಟ್ಟು ಸೇವಾಸೌಧ ಸಮೀಪವಿರುವ ಮರದ ಮಿಲ್‌ಗೆ ನೀರು ನುಗ್ಗಿದೆ. ಬಂಟ್ವಾಳ ಸಮೀಪದ ಉಳ್ಳಗುಡ್ಡೆ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದು ಹಾನಿಗೀಡಾಗಿದೆ. ರಾಮನಗರ ಹೊರವಲಯದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೆಲವೆಡೆ ರಸ್ತೆಯಲ್ಲಿ ನೀರು ಸಂಗ್ರಹಗೊಂಡಿದ್ದರಿಂದ, ಕಿಲೋ ಮೀಟನರ್‌ನಷ್ಟು ದೂರ ವಾಹನಗಳ ದಟ್ಟಣೆ ಕಂಡು ಬಂತು. ಇದರಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.

ಇದೇ ವೇಳೆ, ಧಾರವಾಡ, ಬಳ್ಳಾರಿ, ವಿಜಯನಗರ, ಕೊಪ್ಪಳ, ಹಾವೇರಿ, ಉತ್ತರ ಕನ್ನಡ ಸೇರಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನದಿಂದ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಚಳಿ, ಥಂಡಿಯ ವಾತಾವರಣ ಮನೆ ಮಾಡಿದೆ.

ಫೆಂಗಲ್ ಆರ್ಭಟಕ್ಕೆ 30 ವರ್ಷದಲ್ಲೇ ದಾಖಲೆ ಮಳೆ:16 ಗಂಟೆ ವಿಮಾನ ಹಾರಾಟ ನಿಲ್ಲಿಸಿದ್ದ ಚೆನ್ನೈ ಏರ್ ಪೋರ್ಟ್

ಇಂದು 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ 

ಬೆಂಗಳೂರು: ಪುದುಚೇರಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ನಡುವೆ, ಚಂಡಮಾರುತದ ಪ್ರಭಾವ ಮಂಗಳವಾರದಿಂದ ಕಡಿಮೆಯಾಗುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಮಳೆ ಪರಿಣಾಮವೂ ತಗ್ಗಲಿದೆ. ಆದರೂ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. 

ಉಳಿದಂತೆ ಬೆಂಗಳೂರು, ಕೋಲಾರ, ತುಮಕೂರು ಸೇರಿ ಮತ್ತಿತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಕೆಲಕಾಲ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮತ್ತು ಲಘು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.