Bagalkot electrocution death :ಬಾಗಲಕೋಟೆಯ ನವನಗರದಲ್ಲಿ, ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.  ದೂರು ನೀಡಿದರೂ ತಂತಿ ತೆರವುಗೊಳಿಸದ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ

ಬಾಗಲಕೋಟೆ, (ಅ.26): ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ದುರಂತ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಮಾರು ದಿನಗಳಿಂದ ನೆಲಕ್ಕೆ ಅಂಟಿಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ದುರಂತ ಸಂಭವಿಸಿದೆ. ಸ್ಥಳೀಯರು ಹಲವು ಬಾರಿ ತಂತಿ ತೆಗೆದುಹಾಕುವಂತೆ ಮನವಿ ಮಾಡಿದ್ದರೂ ಹೆಸ್ಕಾಂ ಸಿಬ್ಬಂದಿ ಕಡೆಗಣಿಸಿದ್ದರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಲಕ್ಕೆ ಬಿದ್ದು ಒದ್ದಾಡಿ ಪ್ರಾಣಬಿಟ್ಟ ವಿಡಿಯೋ ವೈರಲ್:

ಬೀದಿ ಬದಿಯ ವಿದ್ಯುತ್ ದೀಪಗಳ ಸ್ವಿಚ್ ಮತ್ತು ಬಟನ್‌ಗಳಿರುವ ಬೋರ್ಡ್‌ನ ಪಕ್ಕದಲ್ಲೇ ವಿದ್ಯುತ್ ತಂತಿ ಬಿದ್ದಿತ್ತು. ರಾಜಸ್ಥಾನ ಮೂಲದ ಆ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ತಂತಿ ತುಳಿದಿದ್ದಾನೆ. ಕೂಡಲೇ ವಿದ್ಯುತ್ ಆಘಾತಕ್ಕೊಳಗಾಗಿ ನಡುಗಿ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ಘಟನೆಯನ್ನು ವಿಡಿಯೋ ಮಾಡಿದ್ದು, ನೆಲದಲ್ಲಿ ನರಳಾಡುತ್ತಾ, ನಡುಗುತ್ತಾ ಜೀವ ಬಿಟ್ಟ ದೃಶ್ಯ ದಾರುಣವಾಗಿದೆ. ಸ್ಥಳೀಯರು ಬದುಕಿಸಲು ಪ್ರಯತ್ನಿಸಿದರು. ಕಟ್ಟಿಗೆ ತಂದು ತಂತಿಯನ್ನು ದೂರ ಮಾಡಲು ಯತ್ನಿಸಿದರಾದರೂ, ನರಳುತ್ತಾ ಜೀವ ಬಿಟ್ಟ ವ್ಯಕ್ತಿಯನ್ನು ರಕ್ಷಿಸಲಾಗಲಿಲ್ಲ. ನಂತರ ಅಂಬುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಆಗಲೇ ಅವರು ಮೃತಪಟ್ಟಿದ್ದರು.

ಹೆಸ್ಕಾಂ ವಿರುದ್ಧ ಆಕ್ರೋಶ:

ಸಾರ್ವಜನಿಕರು ಹಲವು ದಿನಗಳಿಂದ ತಂತಿ ತೆಗೆದುಹಾಕಿ ಎಂದು ಮನವಿ ಮಾಡಿದ್ದರೂ ಹೆಸ್ಕಾಂ ಸಿಬ್ಬಂದಿ ಕ್ಯಾರೆ ಎನ್ನದೇ ಇದ್ದರು. ಈ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯ ಹೆಸರು, ಇತರ ವಿವರಗಳು ಇನ್ನೂ ಗೊತ್ತಾಗಿಲ್ಲ. ಹೆಸ್ಕಾಂ ವಿರುದ್ಧ ತನಿಖೆ ನಡೆಯುತ್ತಿದೆ.