ಗ್ಯಾರಂಟಿ ನೀಡಿದ್ದ ಶಾಸಕ ರಿಜ್ವಾನ್ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ
ಸಂಪಂಗಿ ರಾಮನಗರದ ನಿವಾಸಿ ಬಿ. ಲಕ್ಷ್ಮಿದೇವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾರ್ಚ್ 13ರಂದು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿದೆ.
ಬೆಂಗಳೂರು(ಮಾ.27): ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್ ಆಯ್ಕೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಸಂಪಂಗಿ ರಾಮನಗರದ ನಿವಾಸಿ ಬಿ. ಲಕ್ಷ್ಮಿದೇವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾರ್ಚ್ 13ರಂದು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿದೆ.
ಶಾಮನೂರು ನಿವೃತ್ತಿ ಪಡೆದು ಮನೆಯಲ್ಲಿರಲಿ: ಕಾಂಗ್ರೆಸ್ ಶಾಸಕ ರಿಜ್ವಾನ್
ಪ್ರಜಾ ಪ್ರತಿನಿಧಿ ಕಾಯಿದೆ ಅಡಿ ರಿಜ್ವಾನ್ ಅರ್ಷದ್ ಅವರು ಅಕ್ರಮ ಎಸಗಿದ್ದು, ಆಯ್ಕೆಯಾಗಲು ಅವರು ಅರ್ಹರಲ್ಲ. ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಕಾಂಗ್ರೆಸ್ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಈ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮ ಎಂಬುದು ಅರ್ಜಿದಾರರ ವಾದವಾಗಿತ್ತು.
ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯಿದೆ ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹೀಗಾಗಿ, ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.