ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು.
ಬೆಂಗಳೂರು (ಏ.2) ಧರ್ಮಸ್ಥಳದಲ್ಲಿ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿ ಕಾಲ್ಪನಿಕ ವಿಚಾರ ಆಧರಿಸಿ, ಕೃತಕ ಬುದ್ದಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟ ಸಂಬಂಧ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ತನ್ನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಎಂ.ಡಿ.ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ.22ಕ್ಕೆ ವಿಚಾರಣೆ ಮುಂದೂಡಿತು.
ಅರ್ಜಿದಾರನ ಪರ ವಕೀಲರು, ಸಾರ್ವಜನಿಕರ ನೆಮ್ಮದಿಗೆ ಹಾಳು ಮಾಡಿದ್ದಾರೆ ಎಂಬ ಆರೋಪ ಮೇಲೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರನಿಗೆ ಸುಮ್ಮನೆ ಇರಲು ಆಗುವುದಿಲ್ಲವೇ? ಅರ್ಜಿದಾರ ಯಾರ ನೆಮ್ಮದಿ ಹಾಳು ಮಾಡಿದ್ದಾರೆ ಎಂದು ಗೊತ್ತಿದೆ. ಸಾರ್ವಜನಿಕರ ನೆಮ್ಮದಿಯಂತೂ ಅಲ್ಲ. ಅವರ ನೆಮ್ಮದಿ, ನೆಮ್ಮದಿಯಲ್ಲವೇ? ಎಂದು ನುಡಿಯಿತು.
ಸ್ವಯಂಪ್ರೇರಿತ ಪ್ರಕರಣ ಅಲ್ಲ:
\Bಸರ್ಕಾರಿ ಅಭಿಯೋಜಕರು, ಅರ್ಜಿದಾರನ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿಲ್ಲ, ಇದು ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದ್ದಾಗಿದೆ. ಸಾಕ್ಷಿ, ದೂರುದಾರನನ್ನು ಸಂರಕ್ಷಿಸಿದ್ದ ಪ್ರಕರಣ ಇದಾಗಿದೆ. ಆದಾಗ್ಯೂ ಕೃತಕ ಬುದ್ದಿಮತ್ತೆ ನೆರವಿನಿಂದ ಸಮೀರ್ ವಿಡಿಯೋ ಮಾಡಿದ್ದಾರೆ. ಕೆಲ ಶವಗಳನ್ನು ಅಲ್ಲಿ ಹೂಳಲಾಗಿದ್ದು, ಕೆಲವನ್ನು ಅಲ್ಲಿ ಸಂಸ್ಕಾರ ಮಾಡಲಾಗಿದೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಐದು ಪ್ರಕರಣ ದಾಖಲಾಗಿವೆ. ತನಿಖೆ ನಡೆಯಲಿ, ಸತ್ಯ ಹೊರಬರಲಿದೆ. ಸಾರ್ವಜನಿಕರನ್ನು ದಾರಿ ತಪ್ಪಿಸಿ, ದ್ವೇಷದ ವಾತಾವರಣ ಸೃಷ್ಟಿಸುವ ಕೆಲಸ ಸಮೀರ್ ಮಾಡಿದ್ದಾನೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಸಮೀರ್ ತನ್ನ ವಿಡಿಯೋದಲ್ಲಿ ಸಾವಿರ ಜನರನ್ನು ರೇಪ್ ಮಾಡಿ ಕೊಲೆ ಮಾಡಿ ಮುಚ್ಚಿ ಹಾಕಿದ್ದಾರೆ. ಇದನ್ನು ಕೇಳಿದರೆ ನಿಮ್ಮ ರಕ್ತ ಕುದಿಯುತ್ತಿಲ್ವಾ ಕರ್ನಾಟಕದ ಮೂಲೆ ಮೂಲೆಯಲ್ಲಿರುವವರು ಬೀದಿಗಿಳಿದು ಪ್ರತಿಭಟನೆ ಮಾಡಬೇಕು ಮತ್ತು ಅನ್ಯಾಯದ ವಿರುದ್ಧ ಪ್ರತಿಯೊಬ್ಬರು ಧ್ವನಿ ಎತ್ತಬೇಕು ಎಂಬ ಸಂದೇಶ ನೀಡಿದ್ದ. ಈ ಮೂಲಕ ದೊಂಬಿ, ಸಾರ್ವಜನಿಕ ಶಾಂತಿಗೆ ಭಂಗ ತರುವ ಕೃತ್ಯ ಎಸಗಿದ್ದಾನೆ ಎಂದು ಧರ್ಮಸ್ಥಳದ ಪೊಲೀಸರು ಸ್ವಯಂಪ್ರೇರಿತವಾಗಿ 2025ರ ಜು.12ರಂದು ಸಮೀರ್ ಮತ್ತು ದೂತ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.


