ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧದ ಗಲಾಟೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಫ್‌ಐಆರ್ ಅಥವಾ ಆರೋಪಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಮತ್ತು ಮೇಲ್ನೋಟಕ್ಕೆ ಅಪರಾಧದ ಆರೋಪಗಳಿಲ್ಲವೆಂದು ಪರಿಗಣಿಸಿ, ನ್ಯಾಯಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.

 ಬೆಂಗಳೂರು ಏ.17): ಗುಂಪೊಂದರ ಜೊತೆ ಗಲಾಟೆ ಮಾಡಿಕೊಂಡ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ ಕೈಬಿಡುವಂತೆ ಕೋರಿ ಅಶುತೋಷ್‌ ಹೆಗಡೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಅವರ ಪೀಠ ವಿಚಾರಣೆ ನಡೆಸಿತು.

ಅರ್ಜಿ ಕುರಿತು ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ನಾಲ್ಕನೇ ಆರೋಪಿ ಅಶುತೋಷ್‌ ವಿರುದ್ಧ ಮೇಲ್ನೋಟಕ್ಕೆ ಅಪರಾಧವಾಗುವಂತಹ ಆರೋಪಗಳಿಲ್ಲ. ಮುಂದಿನ ವಿಚಾರಣೆಗೆ ಒಳಪಟ್ಟು ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಈ ಮಧ್ಯಂತರ ಆದೇಶ ನಾಲ್ಕನೇ ಆರೋಪಿಗೆ ಮಾತ್ರ ಸೀಮಿತವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅಶುತೋಷ್‌ ಪರ ವಕೀಲ ಪವನ್‌ಚಂದ್ರ ಶೆಟ್ಟಿ ಅವರು, ಎಫ್‌ಐಆರ್‌ ಅಥವಾ ಆರೋಪ ಪಟ್ಟಿಯಲ್ಲಿ ಅಶುತೋಷ್‌ ಹೆಸರಿಲ್ಲ. ತನ್ನ ಅಜ್ಜನನ್ನು ನೋಡಲು ಅವರು ಭಾರತಕ್ಕೆ ಬಂದಿದ್ದರು. ತಂದೆಯ ಅಧಿಕೃತ ಕಾರಿನಲ್ಲಿ ವಾಪಸ್‌ ಬರುವಾಗ ಕೃತ್ಯ ನಡೆದಿದೆ. ಅದರಲ್ಲಿ ಅಶುತೋಷ್‌ ಪಾತ್ರವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌.ಜಗದೀಶ್‌ ಅವರು, ಅರ್ಜಿಯಲ್ಲಿ ಮೊದಲಿಗೆ ಅಶುತೋಷ್‌ ಪಕ್ಷಕಾರರಾಗಿಲ್ಲ. ಹೀಗಾಗಿ, ಅರ್ಜಿಯನ್ನು ತಿದ್ದುಪಡಿ ಮಾಡಿ ಅಥವಾ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದರೆ ನ್ಯಾಯಾಲಯದ ಅದನ್ನು ಪರಿಗಣಿಸಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ:

ತುಮಕೂರಿನಲ್ಲಿ ಮದುವೆಗೆ ಹೋಗಿ, ಮುಸ್ಲಿಂ ಸಮುದಾಯದ ಏಳು ಮಂದಿ ಇನ್ನೋವಾ ಕಾರಿನಲ್ಲಿ ಹಳೇ ನಿಜಗಲ್‌ ಬಳಿ ಬರುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಕಾರಿನ ಚಾಲಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲುಗಡೆ ಮಾಡುತ್ತಿದ್ದಂತೆಯೇ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ‌ ಕಾರಿನಲ್ಲಿದ್ದ ಸಲ್ಮಾನ್‌ ಖಾನ್‌ ಅವರ ಮೂರು ಹಲ್ಲುಗಳು ಮುರಿದಿವೆ. ಅನಂತ್‌ ಕುಮಾರ್‌ ಹೆಗಡೆ ಕಾರಿನಲ್ಲಿದ್ದರು. ಅವರು ಕರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನಮ್ಮ ತಾಯಿ ಮೇಲೆ ಅನಂತ್‌ ಕುಮಾರ್‌ ಹಲ್ಲೆ ನಡೆಸಿದರು. ಭದ್ರತಾ ಸಿಬ್ಬಂದಿ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ಎಂದು ಗಾಯಾಳು, ಹಾಲೇನಹಳ್ಳಿಯ ಸೈಫ್‌ ಖಾನ್‌ ದೂರು ನೀಡಿದ್ದರು.

ದೂರು ಆಧರಿಸಿ ದಾಬಸ್‌ ಠಾಣೆಯ ಪೊಲೀಸರು ಅನಂತ್‌ ಕುಮಾರ್‌ ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 117 (ಸ್ವಯಂಪ್ರೇರಿತವಾಗಿ ತೀವ್ರ ಹಾನಿ ಮಾಡುವುದು), 126 (ತಪ್ಪಾಗಿ ನಿರ್ಬಂಧಿಸುವುದು), 74 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಆಕೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗವನ್ನು ಶಿಕ್ಷಿಸಲು ಅವಕಾಶ ನೀಡುತ್ತದೆ), 351(4) (ಅನಾಮಧೇಯ ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಕುರಿತ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಅನಂತ್‌ ಕುಮಾರ್‌ ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.