ಬೆಳಗಾವಿಯಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣಾ ಪ್ರಚಾರದ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರೊಬ್ಬರನ್ನು ಆತನ ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಚುನಾವಣಾ ಸಭೆ ಮುಂದೂಡಲ್ಪಟ್ಟಿದೆ.

ಬೆಳಗಾವಿ (ಸೆ.9): ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅ‍ವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಂಘ ಹಾಗೂ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘದ ಚುನಾವಣಾ ಪ್ರಚಾರಕ್ಕೆಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಕೆಪಿಎಸ್ ಕಚೇರಿ ಎದುರು ಗಲಾಟೆ ನಡೆದಿದೆ. ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿಗೆ ಪತ್ನಿ ಲಗಮವ್ವ ಏಟು ನೀಡಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

-ಜಿಲ್ಲಾ ಉಸ್ತುವಾರಿ ಸಚಿವರ ಎದುರೆ ನಡೆದ ಘಟನೆ

ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ನೀಡಿದ್ದ ಗಂಡನಿಗೆ ರಸ್ತೆಯಲ್ಲಿಯೇ ತರಾಟೆ ತೆಗೆದುಕೊಂಡಿದ್ದಾಳೆ.

ಗಂಡ-ಹೆಂಡತಿ ಜಗಳ ಬಿಡಿಸಲು ಸಚಿವ ಸತೀಶ್ ಜಾರಕಿಹೊಳಿ ಕೂಡ ಸುಸ್ತಾಗಿ ಹೋಗಿದ್ದಾರೆ. ಇನ್ನು ಪಿಕೆಪಿಎಸ್ ಒಳಗೆ ಸಚಿವ ಸತೀಶ ಜಾರಕಿಹೊಳಿ ತೆರಳಿದ ಬಳಿಕ ಮತ್ತೆ ಪತಿಯನ್ನು ಜಾರಕಿಹೊಳಿ‌ ಸಹೋದರರು ಹೈ ಜಾಕ್ ಮಾಡಿ ಕರೆದೊಯ್ದಿದ್ದಾರೆ‌ ಎಂಬ ಆರೋಪ ಕೂಡ ಕೇಳಿಬಂದಿದೆ.

ಘಟನಾ ಸ್ಥಳಕ್ಕೆ ಮಾಜಿ ಸಂಸದ ರಮೇಶ ಕತ್ತಿ ಕೂಡ ಬಂದಿದ್ದರಿಂದ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೂಡ ಹರಸಾಹಸಪಟ್ಟರು. ಗಲಾಟೆ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಮತದ ಚುನಾಚಣೆಯ ಮತ ನಾಮನಿರ್ದೇಶನ ಮಾಡುವ ನಿರ್ದೇಶಕರ ಸಭೆ ಮುಂದೂಡಲಾಯಿತು.