ಬಸ್ ಟಿಕೆಟ್ ದರ ಹೆಚ್ಚಿಸಿದರೆ ಪರವಾನಗಿ ರದ್ದು: ಶ್ರೀರಾಮುಲು
ದಸರಾ ವೇಳೆ ದರ ಏರಿಸುವ ಖಾಸಗಿ ಆಟಾಟೋಪಕ್ಕೆ ಸರ್ಕಾರದ ಬ್ರೇಕ್, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ
ಬೆಂಗಳೂರು(ಅ.01): ದಸರಾ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಟಿಕೆಟ್ ದರವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂತಹ ಬಸ್ಗಳ ಮಾರ್ಗ ಪರವಾನಗಿ ರದ್ದುಪಡಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಸಚಿವರು, ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ನಗರ ಪ್ರದೇಶಗಳಿಂದ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ಮಾರ್ಗ ಪರವಾನಗಿಯನ್ನು ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದಿದ್ದಾರೆ.
ಪಕ್ಷ ಬಯಸಿದರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ಶ್ರೀರಾಮುಲು
ಪ್ರಯಾಣಿಕರ ರಕ್ಷಣೆ ಸಾರಿಗೆ ಇಲಾಖೆಯ ಮೊದಲ ಆದ್ಯತೆ. ಕಿರಿಕಿರಿ ಉಂಟು ಮಾಡುವುದು, ಇಲ್ಲವೇ ತೊಂದರೆ ಕೊಟ್ಟು ಹೆಚ್ಚಿನ ದರ ವಸೂಲಿ ಮಾಡಿದರೆ ಸಹಿಸುವುದಿಲ್ಲ. ಹಾಗೊಂದು ವೇಳೆ ತಮ್ಮ ಗಮನಕ್ಕೆ ಬಂದರೆ ಅಂತಹ ಬಸ್ಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೇ, ಯಾವ ಯಾವ ರೂಟ್ಗಳಿಗೆ ಎಷ್ಟುದರ ನಿಗದಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.