ಮುಂದಿನ ವಾರ ಸಮನ್ವಯ ಸಮಿತಿ ಸಭೆ, ಅಲ್ಲೇ ಚರ್ಚೆ| ಸುಧಾಕರ್‌ಗೆ ಅತೃಪ್ತಿ ಇಲ್ಲ, ರಾಜಕೀಯದಲ್ಲಿ ಎಲ್ಲರೂ ಖುಷಿಯಾಗಿರಲ್ಲ

ಮೈಸೂರು[ಜ.10]: ನಿಗಮ​-ಮಂಡಳಿ ನೇಮಕಾತಿ ವಿಷಯದಲ್ಲಿ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅಸಮಾಧಾನಗೊಂಡಿರುವ ವಿಷಯಕ್ಕೆ ಸಂಬಂಧಿಸಿ ಹಾದಿ- ಬೀದಿಯಲ್ಲಿ ಮಾತನಾಡುವುದಿಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಬುಧವಾರ ಸುದ್ದಿಗಾರರೊಡನೆ ಮಾತನಾಡಿ ಮುಂದಿನ ವಾರ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವನ್ನು ಅದೇ ಸಭೆಯಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ, ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್‌ಗೂ ಯಾವುದೇ ಅಸಮಾಧಾನ ಇಲ್ಲ. ಅವರ ಜೊತೆಯೂ ಮಾತನಾಡುತ್ತೇನೆ. ರಾಜಕೀಯದಲ್ಲಿ ಯಾವಾಗಲೂ ಎಲ್ಲರೂ ಖುಷಿಯಾಗಿ ಇರುವುದಿಲ್ಲ. ಅಸಮಾಧಾನ ಇರುತ್ತದೆ ಎಂದರು.

ಮುಷ್ಕರ ಕಾಂಗ್ರೆಸ್‌ ಪ್ರೇರಿತ ಅಲ್ಲ:

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳನ್ನು ಹೊರತುಪಡಿಸಿ ಉಳಿದ ಕಾರ್ಮಿಕ ಸಂಘಟನೆಗಳೆಲ್ಲಾ ಭಾಗಿಯಾಗಿವೆ. ಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ. ಕಾರ್ಮಿಕರ ಮುಷ್ಕರ ಕಾಂಗ್ರೆಸ್‌ ಪ್ರೇರಿತವಲ್ಲ. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮೇಲ್ವರ್ಗ ಮೀಸಲು ಗಿಮಿಕ್‌

ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟುಮೀಸಲಾತಿ ನೀಡಬೇಕು ಎಂಬ ಮಸೂದೆ ಮಂಡನೆ ಬಿಜೆಪಿಯ ಚುನಾವಣಾ ಗಿಮಿಕ್‌. ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಬೇಕು ಎಂಬುದು ಸ್ವಾಗತಾರ್ಹ. ಆದರೆ ಮೀಸಲಾತಿಯನ್ನು ವಿರೋಧಿಸುತ್ತಿದ್ದ ಬಿಜೆಪಿಯವರೇ ಈಗ ಮೀಸಲಾತಿ ಮಸೂದೆ ಮಂಡನೆಗೆ ಮುಂದಾಗಿರುವುದು ಕೇವಲ ಚುನಾವಣಾ ಗಿಮಿಕ್‌ ಅಷ್ಟೆ, ಬೇರೇನೂ ಅಲ್ಲ.

- ಸಿದ್ದರಾಮಯ್ಯ, ಮಾಜಿ ಸಿಎಂ