ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಸಿದ್ರಾಮುಲ್ಲಾಖಾನ್‌’ ಎಂದು ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಮೇಲೆ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. 

ಬೆಂಗಳೂರು (ಮಾ.16): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಸಿದ್ರಾಮುಲ್ಲಾಖಾನ್‌’ ಎಂದು ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಮೇಲೆ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜತಗೆ, ಪ್ರತಿವಾದಿಗಳಾದ ಮುಂಡಗೋಡು ಠಾಣಾ ಪೊಲೀಸರು ಮತ್ತು ದೂರುದಾರರಾದ ಠಾಣೆಯ ಮುಖ್ಯಪೇದೆ ಗಣಪತಿ ಬಸವಂತಪ್ಪ ಹುನ್ನಳ್ಳಿಗೆ ನೋಟಿಸ್‌ ಜಾರಿಗೊಳಿಸಿತು. 2024ರ ಫೆ.23ರಂದು ಮುಂಡಗೋಡು ತಾಲೂಕಿನ ಪಾಳಾ ಗ್ರಾಮ ಮತ್ತು ಇಂದೂರ ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ನಡೆದಿತ್ತು. ಅದರಲ್ಲಿ ಭಾಗವಹಿಸಿದ್ದ ಅನಂತ ಕುಮಾರ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ‘ಸಿದ್ರಾಮುಲ್ಲಾ ಖಾನ್‌ ಸರ್ಕಾರವನ್ನು ನಾವೆಲ್ಲೂ ನೋಡಿಲ್ಲ. 

ಅತ್ಯಂತ ಹೇಸಿಗೆ ಬರುವ ರೀತಿ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವಲ್ಲಿ ನಿರತರಾಗಿದ್ದಾರೆ. ಇವರ ಕೈಯಲ್ಲಿ ಅಧಿಕಾರ ಕೊಟ್ಟರೆ ನಮ್ಮನ್ನು ಮಾರಾಟ ಮಾಡುತ್ತಾರೆ. ಹಿಂದೂಗಳ ದೇವಸ್ಥಾನದ ಹುಂಡಿಗೆ ಹಾಕಿದ ಹಣವನ್ನು, ಚರ್ಚ್‌, ಮಸಿದಿಗೆ ಕೊಡುತ್ತಾರೆ. ಹಿಂದೂಗಳ ದೇವಸ್ಥಾನದಲ್ಲಿ ದೇವರಿಲ್ಲವೇ? ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಮುಂಡಗೋಡು ಠಾಣೆ ಮುಖ್ಯಪೇದೆ ದೂರು ದಾಖಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಂತ ಕುಮಾರ ಹೆಗಡೆ ಅವಹೇಳಕನಕಾರಿಯಾಗಿ ಮಾತನಾಡಿದ್ದಾರೆ. 

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಆ ಮೂಲಕ ಸಭೆಯಲ್ಲಿ ಹಾಜರಿದ್ದ ಯುವಕರಿಗೆ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಶಾಂತಿ-ಸೌರ್ಹದತೆ ಕದಡುವ, ಜಾತಿ- ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಮುಂಡಗೋಡು ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದರಿಂದ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಂಸದರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.