ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ದೇಶದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಹೇಳುವ ಕೇಂದ್ರ ಸರ್ಕಾರ, ಈಗಾಗಲೇ ಹಣದುಬ್ಬರದಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಬೆಂಗಳೂರು (ಮೇ.3): ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನರ ಮೇಲೆ ದರ ಏರಿಕೆಯ ಭಾರ ಹಾಕುವುದು ಸರಿಯಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಮಂತ್ರಿ, ಹಣಕಾಸು ಸಚಿವರು ಸೇರಿ ಬಿಜೆಪಿಯ ಅನೇಕ ನಾಯಕರು ದೇಶದ ಆರ್ಥಿಕ ಪರಿಸ್ಥಿತಿ ಬಲವಾಗಿದೆ ಎಂದು ಹೇಳುತ್ತಿದ್ದಾರೆ. ಈಗ ದರ ಹೆಚ್ಚಿಸುವ ಅಗತ್ಯವೇನು? ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ಕಷ್ಟವಾಗುತ್ತಿದೆ. ಇಂಥ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಹೆಚ್ಚು ಮಾಡುವ ಅವಶ್ಯಕತೆ ಇರಲಿಲ್ಲ ಎಂದರು. ಇರಾನ್ ಯುದ್ಧವನ್ನೇ ನೆಪವಾಗಿಟ್ಟುಕೊಂಡು ಬೆಲೆ ಹೆಚ್ಚಳ ಮಾಡಬಾರದಾಗಿತ್ತು. ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದು ಅವರು ಹೇಳಿದರು.

ಹಣದುಬ್ಬರ ನಿಯಂತ್ರಿಸಲು, ಸಂಕಷ್ಟ ನಿಭಾಯಿಸುವ ಶಕ್ತಿ ಕೇಂದ್ರಕ್ಕೆ ಇದೆ. ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಪ್ರಧಾನ ಮಂತ್ರಿಗಳೂ ಹೇಳುತ್ತಾರೆ, ಕೇಂದ್ರ ಹಣಕಾಸು ಸಚಿವರು ಕೂಡ ಹೇಳುತ್ತಾರೆ. ಹೀಗಿರುವಾಗ ಆರ್ಥಿಕ ಸ್ಥಿತಿ ಸುಭದ್ರವಾಗಿರುವುದನ್ನು ಇಂತಹ ಸಂದರ್ಭದಲ್ಲಿ ತೋರಿಸಬೇಕು ಎಂದು ಹೇಳಿದರು.

ತೈಲದ ಬ್ಯಾರಲ್‌ ದರ ಹೆಚ್ಚಳವಾಗಿದ್ದರೆ ಅದನ್ನು ತಡೆದುಕೊಳ್ಳುವ ಶಕ್ತಿ ತೋರಿಸಬೇಕು, ಅದನ್ನು ಬಿಟ್ಟು ಜನ ಸಮುದಾಯಕ್ಕೆ ಹೊರೆಯಾಗುವ ರೀತಿ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡುವುದು ಸರಿಯಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಹೆಚ್ಚಳವಾದಾಗ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ಹೇಳುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರೇನು ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.