Jai Bangla Slogan Case ಬೆಂಗಳೂರಿನ ಹೆಬ್ಬಗೋಡಿಯಲ್ಲಿ ಸರ್ಕಾರಿ ಜಮೀನಿನಲ್ಲಿದ್ದ ಅಕ್ರಮ ಶೆಡ್ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಎಂದು ಘೋಷಣೆ ಕೂಗಿ ಬಂಧಿತರಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರು (ಮಾ.18): ನಗರದ ಹೆಬ್ಬಗೋಡಿಯಲ್ಲಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಶೆಡ್ಗಳ ತೆರವು ಕಾರ್ಯಾಚರಣೆ ವೇಳೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಬಂಧನಕ್ಕೆ ಒಳಗಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಗೆ ಹೈಕೋರ್ಟ್ ಜಾಮೀನು ನೀಡಿದೆ.
ಜಾಮೀನು ಕೋರಿ ಸದ್ಯ ಆನೇಕಲ್ ತಾಲೂಕಿನ ಹುಲಿಮಂಗಲ ಪೊಡು ಗ್ರಾಮದಲ್ಲಿ ನೆಲೆಸಿರುವ ಸರ್ಬಾನು ಖಾತೂನ್ (25) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಪೀಠ ಈ ಆದೇಶ ಮಾಡಿದೆ.
ಪ್ರಕರಣದ ದೂರಿನ ಸಾರಾಂಶ ಪರಿಶೀಲಿಸಿದರೆ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ಅಧಿಕಾರಿಗಳು ತೆರವುಗೊಳಿಸುತ್ತಿದ್ದ ಪ್ರಕ್ರಿಯೆಯನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸುತ್ತಿದ್ದರು. ಆ ಸಮಯದಲ್ಲಿ ವ್ಯಕ್ತಿಯೊಬ್ಬರು ಅರ್ಜಿದಾರೆಯನ್ನು ‘ಜೈ ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುವಂತೆ ಪ್ರಚೋದಿಸಿದ್ದರು. ಈ ವೇಳೆ ‘ಜೈ ಬಾಂಗ್ಲಾ’ ಎಂದು ಕೂಗಿದ ಮಹಿಳೆ ಆ ನಂತರ ಮೂರು ಬಾರಿ ‘ಜೈ ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಾರೆ.
ಅರ್ಜಿದಾರೆಗೆ ಇಬ್ಬರು ಅಪ್ರಾಪ್ತ ಮಕ್ಕಳಿವೆ. ಆ ಮಕ್ಕಳನ್ನು ಅರ್ಜಿದಾರೆಯೇ ನೋಡಿಕೊಳ್ಳಬೇಕಿದೆ. ಪ್ರಕರಣದ ಸತ್ಯಾಸತ್ಯತೆ ಹಾಗೂ ಸಂದರ್ಭಗಳನ್ನು ಪರಿಗಣಿಸಿದರೆ ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.


