ಅಕ್ರಮ ಗಣಿಗಾರಿಕೆಯಲ್ಲಿ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿರುವ ಹಿನ್ನಲೆಯಲ್ಲಿ  ಇದೀಗ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ. ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದಾರೆ. 

ಬೆಂಗಳೂರು(ಮೇ.08) ಓಬಳಾಪುರಂ ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಇಷ್ಟೇ ಲ್ಲ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದರ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಕ್ರಮ ಕೈಗೊಂಡಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ.6ರಿಂದ ಜಾರಿಗೆ ಬರುವಂತೆ ಜನಾರ್ಧನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

Add Asianetnews Kannada as a Preferred SourcegooglePreferred

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮುಂದಿನ 6 ವರ್ಷಗಳ ಕಾಲ ಜನಾರ್ಧನ ರೆಡ್ಡಿ ಅನರ್ಹರಾಗಿದ್ದಾರೆ. ಈ ಅನರ್ಹತೆ ಜನಾರ್ಧನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. 

ರೆಡ್ಡಿ ಶಿಕ್ಷೆ ಸ್ವಾಗತ ಮಾಡಿದ ಕೆಆರ್‌ಎಸ್‌ ಪಕ್ಷ
ಅಕ್ರಮ ಗಣಿಗಾರಿಕೆ ಕಿಂಗ್‌ಪಿನ್‌ ಜನಾರ್ಧನ ರೆಡ್ಡಿಗೆ ಓಬಳಾಪುರ ಮೈನಿಂಗ್‌ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಉತ್ತಮ ಬೆಳವಣಿಗೆ ಹಾಗೂ ಸ್ವಾಗತಾರ್ಹ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ತಿಳಿಸಿದೆ. ಜನಾರ್ಧನ ರೆಡ್ಡಿಯ ಬಳ್ಳಾರಿ ರಿಪಬ್ಲಿಕ್‌ ಉರುಳಿಸುವಲ್ಲಿ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ಮತ್ತು ಆ ಸಂದರ್ಭದಲ್ಲಿ ಲೋಕಾಯುಕ್ತರಾಗಿದ್ದ ನ್ಯಾ.ಸಂತೋಷ್‌ ಹೆಗ್ಡೆ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. ಇದು ಇಡೀ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 2ನೇ ಮಹತ್ವದ ತೀರ್ಪಾಗಿದೆ. ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಸತೀಶ್‌ ಸೈಲ್‌ಗೆ ಬೆಲೆಕೇರಿ ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಸುಗಲಮ್ಮ ದೇವಿ ಗುಡಿಯನ್ನು ಉರುಳಿಸಿದ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಪಕ್ಷ ತಕ್ಷಣ ಜನಾರ್ಧನ ರೆಡ್ಡಿ ಅವರನ್ನು ಪಕ್ಷದಿಂದ ಹೊರಹಾಕಬೇಕು. ರಾಜ್ಯ ಸರ್ಕಾರವು ಉಳಿದ ಅಕ್ರಮಗಳನ್ನು ಸೂಕ್ತವಾಗಿ ತನಿಖೆ ನಡೆಸಬೇಕು ಎಂದು ಪಕ್ಷ ಪ್ರಕಟಣೆ ಮೂಲಕ ಆಗ್ರಹಿಸಿದೆ.