ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ತೀರ್ಪು ಅವರ ಶಾಸಕ ಸ್ಥಾನ ಉಳಿಸಿಕೊಳ್ಳಲು ಸಹಾಯಕವಾಗಿದ್ದು, ರಾಜಕೀಯ ಭವಿಷ್ಯಕ್ಕೆ ಉಸಿರಾಟ ನೀಡಿದೆ.  ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪು ನಿರ್ಣಾಯಕವಾಗಲಿದೆ.

ಬಳ್ಳಾರಿ (ಜೂ. 11): ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

ಹೈದರಾಬಾದ್‌ನ ನಾಮಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಕಳೆದ ಮೇ 30ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಈ ತೀರ್ಪು 2011ರಲ್ಲಿ ನಡೆದ ಓಬಳಾಪುರಂ ಮೈನಿಂಗ್ ಕಂಪನಿ (OMC) ಮೂಲಕ ಗಡಿ ಮೀರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿತ್ತು. ಒಟ್ಟು 850 ಕೋಟಿ ರೂ. ಮೌಲ್ಯದ ಗಣಿಸಂಪತ್ತು ಲೂಟಿ ಆರೋಪದಡಿ, ಜನಾರ್ದನ ರೆಡ್ಡಿ 2011ರ ಸೆಪ್ಟೆಂಬರ್ 5ರಂದು ಸಿಬಿಐ ವಶಕ್ಕೆ ಸೇರುವ ಮೂಲಕ 3 ವರ್ಷ 9 ತಿಂಗಳು ಜೈಲುವಾಸ ಅನುಭವಿಸಿದ್ದರು.

ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ: ರಾಜಕೀಯ ಭವಿಷ್ಯಕ್ಕೆ ಉಸಿರಾಟ

ಸಿಬಿಐ ಕೋರ್ಟ್‌ನ ಆದೇಶದ ವಿರುದ್ಧ ಜನಾರ್ದನ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ ಬಳಿಕ, ತೆಲಂಗಾಣ ಹೈಕೋರ್ಟ್ ಇದೀಗ ಸಿಬಿಐ ಕೋರ್ಟ್ ತೀರ್ಪಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ತೀರ್ಪು ಅವರ ರಾಜಕೀಯ ಭವಿಷ್ಯಕ್ಕೆ ಉಸಿರಾಟ ನೀಡಿದ್ದು, ಶಾಸಕರ ಸ್ಥಾನ ಉಳಿಸಿಕೊಳ್ಳುವಲ್ಲಿ ಸಹಾಯಕವಾಗಿದೆ. ಸಿಬಿಐ ವಿಚಾರಣೆ ಬಳಿಕ ರಾಜಕೀಯದಿಂದ ದೂರವಿದ್ದ ಜನಾರ್ದನ ರೆಡ್ಡಿ, 2023ರಲ್ಲಿ ಹೊಸ ರಾಜಕೀಯ ಪಕ್ಷ 'ಕಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)' ಸ್ಥಾಪಿಸಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದರು. ಈ ಮೂಲಕ ರಾಜ್ಯದ ರಾಜ್ಯ ರಾಜಕಾರಣಕ್ಕೆ ಸಕ್ರಿಯವಾಗಿ ಪಾಲ್ಗೊಂಡ ನಂತರ ಮಾತೃ ಪಕ್ಷವಾದ ಬಿಜೆಪಿಯೊಂದಿಗೆ ಕೆಆರ್‌ಪಿಪಿಯನ್ನು ವಿಲೀನ ಮಾಡಿದರು.

ಮತ್ತೆ ರಾಜಕೀಯ ಬಲದ ಪ್ರದರ್ಶನ?

ಈ ತಾತ್ಕಾಲಿಕ ತಡೆಯಾಜ್ಞೆಯ ಹಿನ್ನೆಲೆಯಲ್ಲಿ, ಜನಾರ್ದನ ರೆಡ್ಡಿ ಮತ್ತೊಮ್ಮೆ ರಾಜಕೀಯ ವೇದಿಕೆಯಲ್ಲಿ ಬಲವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಈ ತೀರ್ಪು ಕೇವಲ ತಾತ್ಕಾಲಿಕ ತಡೆಯಾಜ್ಞೆಯಾಗಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ನಿರ್ಣಾಯಕವಾಗಲಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಲವು ವರ್ಷಗಳ ಕಾಲ ನ್ಯಾಯಾಂಗ ಪ್ರಕ್ರಿಯೆ ನಡೆದು ಇದೀಗ ತಾತ್ಕಾಲಿಕ ತಡೆಯಾಜ್ಞೆ ಸಿಕ್ಕಿರುವುದು, ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಇದೇ ಸಂದರ್ಭದಲ್ಲಿ, ಆರೋಪಿಗೆ ಮುಂದಿನ ದಿನಗಳಲ್ಲಿ ಶಿಕ್ಷೆ ಆಗಬಹುದೇ ಅಥವಾ ಕ್ಲೀನ್ ಚಿಟ್ ಸಿಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.