ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸೀಡಿ ಬಹಿರಂಗ ಪ್ರಕರಣ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಪೊಲೀಸರು ಸಿದ್ಧಪಡಿಸಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಲು ಹೈಕೋರ್ಟ್‌ ನಿರಾಕರಿಸಿದೆ

 ಬೆಂಗಳೂರು (ಸೆ.28): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarkiholi) ಸೀಡಿ ಬಹಿರಂಗ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT)ದ ಪೊಲೀಸರು ಸಿದ್ಧಪಡಿಸಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಲು ಹೈಕೋರ್ಟ್‌ (High Court) ನಿರಾಕರಿಸಿದೆ. ಸೀಡಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಅ. 7ಕ್ಕೆ ಮುಂದೂಡಿತು.

Add Asianetnews Kannada as a Preferred SourcegooglePreferred

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದಿಸಿ, ಹೈಕೋರ್ಟ್‌ ಅನುಮತಿ ಇಲ್ಲದೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿ (Report) ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿದರು.

ರಮೇಶ್‌ ಜಾರಕಿಹೊಳಿ ಸಿ.ಡಿ. ಕೇಸ್: ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಇದಕ್ಕೆ ಆಕ್ಷೇಪಿಸಿದ ಯುವತಿ ಪರ ಹಿರಿಯ ವಕೀಲರಾದ ಇಂದಿರಾ ಜೈಸಿಂಗ್‌, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ವ್ಯರ್ಥವಾಗಲಿದೆ. ಆದ್ದರಿಂದ ಮೊದಲು ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕು. ಅಲ್ಲದೆ, ಎಸ್‌ಐಟಿ ಮುಖ್ಯಸ್ಥರು ತನಿಖೆ ವೇಳೆ ರಜೆಯಲ್ಲಿದ್ದರು. ವರದಿ ಪರಿಶೀಲಿಸಲು ನಿರಾಕರಿಸಿದ್ದಾರೆ. ಹೀಗಾಗಿ ಎಸ್‌ಐಟಿ ಮುಖ್ಯಸ್ಥರ ಗೈರು ಹಾಜರಿಯಲ್ಲಿ ತನಿಖೆ ಮುಂದುವರೆಯಬಹುದೇ ಎಂಬುದನ್ನೂ ಪರಿಶೀಲಿಸಬೇಕಿದೆ ಎಂದು ಪ್ರಶ್ನಿಸಿದರು.

ಜಾರಕಿಹೊಳಿ ಸೀಡಿ ಕೇಸಲ್ಲಿ ಯುವತಿ ವಾದವನ್ನೂ ಆಲಿಸಬೇಕು: ಹೈಕೋರ್ಟ್‌

ಅಲ್ಲದೇ, ಅಂದಿನ ಗೃಹ ಸಚಿವರು (Home Minister) ತಮಗೆ ವರದಿ ಸಲ್ಲಿಸುವ ಸಂಬಂಧ ಎಸ್‌ಐಟಿ ರಚಿಸಲು ಆದೇಶಿಸಿದ್ದರು. ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬಹುದೇ ಎಂದು ಪ್ರಶ್ನಿಸಿದರು. ಹೀಗಾಗಿ, ವಿಚಾರಣಾ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಅವಕಾಶ ನೀಡಿ ಎಂದು ಕೋರುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದರು.

ವಾದ -ಪ್ರತಿವಾದಗಳನ್ನು ಆಲಿಸಿದ ಪೀಠ, ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದೂಡಿತು.