ಜೆಡಿಎಸ್‌ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ MLC ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸಲ್ಲಿಸಿದ್ದ 'ಬಿ ರಿಪೋರ್ಟ್‌' ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ತನಿಖೆ ಮುಂದುವರೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

 ಬೆಂಗಳೂರು (ಡಿ.3): ಜೆಡಿಎಸ್‌ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. 

Add Asianetnews Kannada as a Preferred SourcegooglePreferred

ಬಿ ರಿಪೋರ್ಟ್ ತಿರಸ್ಕೃತ:

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ‘ಬಿ ರಿಪೋರ್ಟ್‌’ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರಿಂದಾಗಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಸೂರಜ್‌ಗೆ ಸಂಕಷ್ಟ ಎದುರಾಗಿದೆ.

ಮಂಗಳವಾರ ನ್ಯಾಯಾಲಯ ಇದರ ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್‌ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್‌ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ.

ಏನಿದು ಪ್ರಕರಣ:

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್‌ ರೇವಣ್ಣ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್‌ರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಬಳಿಕ ಸೂರಜ್‌ ರೇವಣ್ಣ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.