ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಿದ್ಧತೆ ನಡೆಸಲು ಜೆಡಿಎಸ್ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಬೆಂಗಳೂರು (ಏ.11): ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ಸಿದ್ಧತೆಯ ಸಂಬಂಧ ಜೆಡಿಎಸ್ ನಗರ ಘಟಕದ ವತಿಯಿಂದ ಶನಿವಾರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಕೆಂಗೇರಿ ಬಳಿಯ ಕೊಮ್ಮಘಟ್ಟದ ನೈಸ್ ರಸ್ತೆ ಬದಿ ನಡೆಯುವ ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಸಮಾವೇಶದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಮುಂಬರುವ ಜಿಬಿಎ ಚುನಾವಣೆಗೆ ಮುಖಂಡರು ಮತ್ತು ಕಾರ್ಯಕರ್ತರನ್ನು ಸಜ್ಜುಗೊಳಿಸುವುದು ಸಮಾವೇಶದ ಉದ್ದೇಶವಾಗಿದೆ.
ಶುಕ್ರವಾರ ಸಮಾವೇಶದ ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ನಗರದಕ್ಕೆ ಸೀಮಿತವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಳೆದ ಒಂದು ವಾರದಿಂದ ತಯಾರಿ ಆಗಿದೆ. ಪಕ್ಷ 25 ವರ್ಷ ಪೂರೈಸಿದಕ್ಕಾಗಿ ಬೆಳ್ಳಿ ಹಬ್ಬ ಮಾಡುತ್ತಿದ್ದೇವೆ ಎಂದರು.
1 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ
ಹೊಸ ನಾಯಕತ್ವ ಹುಟ್ಟು ಹಾಕಬೇಕಿದೆ. ಜಿಬಿಎ ಚುನಾವಣೆ ನಡೆಯೋದು ಇದೆ. ಸುಪ್ರೀಂಕೋರ್ಟ್ ಆದೇಶ ಸಹ ಇದೆ. ಚುನಾವಣೆ ಆಗಬೇಕು ಎನ್ನುವ ಅಭಿಲಾಷೆ ಇದೆ. ನಿರಂತರವಾಗಿ ನಾವು ಜಿಬಿಎ ಚುನಾವಣೆಗಾಗಿ ತಯಾರಿ ಮಾಡಿದ್ದೇವೆ. ಜಿಬಿಎ ಕಮಿಟಿ ಮೀಟಿಂಗ್ ಮಾಡಿದ್ದೇವೆ. ಸಮಾವೇಶಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.


