ರಾಜ್ಯದ ಎಲ್ಲಾ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬಳಕೆದಾರರು ಒಂದು ವಾರದೊಳಗೆ ಗೇಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸೂಚಿಸಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟವನ್ನು ನಿಯಂತ್ರಿಸಲು ಮತ್ತು ಪೂರೈಕೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ರಾಜ್ಯದ ಎಲ್ಲ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬಳಕೆದಾರರು ಗೇಲ್‌ನಲ್ಲಿ (ಗ್ಯಾಸ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌) ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಸೋಮವಾರ ವಸಂತನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆ ಕುರಿತು ನಡೆದ ಐಒಸಿ, ಎಚ್‌ಪಿಸಿ, ಬಿಪಿಸಿ, ಗೇಲ್‌ನ ಅಧಿಕಾರಿಗಳು ಹಾಗೂ ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಕಾಳಸಂತೆಯಲ್ಲಿ ಮಾರಾಟಕ್ಕೆ ತಡೆ:

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾಣಿಜ್ಯ ಗ್ಯಾಸ್‌ ಸಿಲಿಂಡರ್ ಬಳಕೆದಾರರು, ವಿಶೇಷವಾಗಿ ವಾಣಿಜ್ಯ ಅನಿಲ ಸಿಲಿಂಡರ್ ಬಳಸುವ ಹೋಟೆಲ್ ಮಾಲೀಕರು ಗೇಲ್‌ನಲ್ಲಿ ನೋಂದಣಿ ಮಾಡುವುದು ಕಡ್ಡಾಯ. ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ನಿಯಂತ್ರಣ ಹಾಗೂ ಸಿಲಿಂಡರ್ ಪೂರೈಕೆಯಲ್ಲಿ ಪಾರದರ್ಶಕತೆ ಸಾಧಿಸಲು ನೆರವಾಗುತ್ತದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪೈಪ್‌ಲೈನ್ ಆಧಾರಿತ ಗ್ಯಾಸ್ ಪೂರೈಕೆ ವಿಸ್ತರಿಸಲು ಸಹಾಯಕವಾಗಲಿದೆ. ಹೀಗಾಗಿ ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ತೊಂದರೆ ಕುರಿತು ಈಗಾಗಲೇ ಕೇಂದ್ರ ಸರ್ಕಾರರದ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಶೇ.20ರಷ್ಟು ಪೂರೈಸಲು ಒಪ್ಪಿಕೊಂಡಿದೆ. ಇದರ ಜೊತೆಗೆ, ಹೋಟೆಲ್ ಹಾಗೂ ಸಂಬಂಧಿತ ಉದ್ಯಮಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಕನಿಷ್ಠ ಶೇ.50 ವಾಣಿಜ್ಯ ಅನಿಲದ ಪೂರೈಕೆ ಅಗತ್ಯವಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಎಲ್‌ಪಿಜಿ ಸಮಸ್ಯೆಗೆ ಹಂತಹಂತವಾಗಿ ಪರಿಹಾರ

ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ಹಂತ ಹಂತವಾಗಿ ಪರಿಹಾರವಾಗುವ ನಿರೀಕ್ಷೆ ಇದೆ. ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯ ಸ್ಥಿತಿ ಹಾಗೂ ಸುಧಾರಣೆ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್. ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು.

--