ರಾಷ್ಟ್ರೀಯ ಶಿಕ್ಷಣ ನೀತಿ ರದ್ದತಿಗೆ ಶಿಕ್ಷಣ ಸಚಿವ ಸುಧಾಕರ್ ಸಭೆ: ಸಲಹೆ ನೀಡಿದ ತಜ್ಞರು
ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ರದ್ದುಗೊಳಿಸುವ ಬಗ್ಗೆ ಚಿಂತನೆ ಮಾಡುತ್ತಿದ್ದು, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ರಾಜ್ಯದ ಹಲವು ಶಿಕ್ಷಣ ತಜ್ಷರೊಂದಿಗೆ ಸಭೆ ನಡೆಸಿದರು.
ಬೆಂಗಳೂರು (ಜೂ.06): ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿದ್ದ ಕರ್ನಾಟಕದಲ್ಲಿ ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಪುನಃ ರದ್ದುಗೊಳಿಸುವ ಬಗ್ಗೆ ಚಿಂತನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ರಾಜ್ಯದ ಹಲವು ಶಿಕ್ಷಣ ತಜ್ಷರೊಂದಿಗೆ ಸಭೆಯನ್ನು ನಡೆಸಿದ್ದು, ಕೆಲವು ಸಲಹೆಗಳನ್ನು ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಶಿಕ್ಷಣ ಸೌಧದದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ತಜ್ಞರೊಂದಿಗೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಸಭೆಯನ್ನು ನಡೆಸಿದರು. ಪ್ರೊ.ನಿರಂಜನ ಆರಾಧ್ಯ, ಪ್ರೊ.ಸವ್ಯಸಾಚಿ ಚಟರ್ಜಿ, ಪ್ರೊ.ಜಾಫೆಟ್, ಶ್ರೀಪಾದ್ ಭಟ್ ಉಪಸ್ಥಿತಿತರಿದ್ದರು. ಸಭೆಯಲ್ಲಿ ಶಿಕ್ಷಣ ತಜ್ಞರು ಸಚಿವರಿಗೆ ಒಂದಷ್ಟು ಸಲಹೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಸಾಧಕ - ಬಾಧಕಗಳ ಬಗ್ಗೆ ವಿವರಣೆ ನೀಡಿದ್ದಾರೆ. ಆದರೆ, ಇದು ಪ್ರಾಥಮಿಕ ಸಭೆ ಆಗಿರುವ ಕಾರಣಕ್ಕೆ ತಜ್ಞರಿಂದ ಅಭಿಪ್ರಾಯ ಮಾತ್ರ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಕಂಡಿಷನ್ ಹಾಕಿದ ಕಾಂಗ್ರೆಸ್
ಇನ್ನು ಮೊದಲ ಮತ್ತು ಪ್ರಾಥಮಿಕ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸುವ ಬಗ್ಗೆ ಸ್ಪಷ್ಟ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಹಲವು ಸಭೆಗಳನ್ನುಯ ನಡೆಸಿ ಸಾಧಕ- ಬಾಧಕಗಳನ್ನು ತಿಳಿದುಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಜೊತೆಗೆ, ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದರು.
ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ಬಿಡೊಲ್ಲ ಎಂದಿದ್ದ ಸಿದ್ದರಾಮಯ್ಯ: ಹೊಸ ಶಿಕ್ಷಣ ನೀತಿ ಹೆಸರಿನಲ್ಲಿ ಶಿಕ್ಷಣ (education) ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ. ಅನೈತಿಕ ಪೊಲೀಸ್ ಗಿರಿ (Moral policing) ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇನೆ. ರೈತರು, ಕಾರ್ಮಿಕ ದಲಿತರು ಮತ್ತು ಕನ್ನಡಪರ ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಮಾಡಲಾಗುವುದು. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಭೇಟಿ ಮಾಡಿದ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖ್ಯಸ್ಥರಿಗೆ ಭರವಸೆ ನೀಡಿದ್ದರು. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.
ರಾಜ್ಯದ ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.30 ಮತದಾನ
ನೂತನ ಶಿಕ್ಷಣ ನೀತಿಗೆ ಕೊಕ್?: ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ದ್ವೇಷದ ರಾಜಕಾರಣವನ್ನು ಕೊನೆಗಾಣಿಸುತ್ತೇವೆ. ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.