ರಾಜ್ಯದಲ್ಲಿ ಖಾಲಿ ಇರುವ ಸುಮಾರು 15,000 ಪೊಲೀಸ್ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಮಾಹಿತಿ ನೀಡಿದ್ದಾರೆ. ಇಲಾಖೆಯಲ್ಲಿ ಹೊಣೆಗಾರಿಕೆ ನಿಗದಿಪಡಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು (ಸೆ.19): ರಾಜ್ಯಾದ್ಯಂತ ಸುಮಾರು 15,000 ಪೊಲೀಸ್ ಪೇದೆಗಳ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ವೇಳಾಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆ ಮತ್ತು ಪೊಲೀಸ್ ಇಲಾಖೆಯ ಬಲವರ್ಧನೆಗೆ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಸುಮಾರು 15,000 ಪೊಲೀಸ್ ಪೇದೆಗಳ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ವೇಳಾಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಪೇದೆ ನೇಮಕಾತಿಗೆ ಚಾಲನೆ ನೀಡಲಾಗಿದ್ದು, ವೇಳಾಪಟ್ಟಿ ಸಿದ್ಧಪಡಿಸಿದ ಬೆನ್ನಲ್ಲಿಯೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳ ಜವಾಬ್ದಾರಿ ನಿಗದಿ:

ಇಲಾಖೆಯ ಕಾರ್ಯವೈಖರಿ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ. ರೌಡಿಗಳ ಹಾವಳಿ, ಮಹಿಳೆಯರ ಮೇಲಿನ ದೌರ್ಜನ್ಯ, ಮತ್ತು ಬ್ಯಾಂಕ್ ದರೋಡೆಗಳಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು. ಡ್ರಗ್ಸ್ ಹಾವಳಿಯನ್ನು ನಿಯಂತ್ರಿಸಲು ವಿಫಲರಾದ '11 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ' ಎಂದು ಮಾಹಿತಿ ನೀಡಿದರು. ಡ್ರಗ್ಸ್ ಹಾವಳಿ ಹೆಚ್ಚಿರುವ ಠಾಣೆಗಳ ವ್ಯಾಪ್ತಿಯ ಡಿಸಿಪಿ, ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಅಧಿಕಾರಿಗಳ ಕಾರ್ಯಕ್ಷಮತೆ ಕುರಿತು ವಿವರವಾದ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ಆನೇಕಲ್ ಇನ್ಸ್‌ಪೆಕ್ಟರ್ ಮತ್ತು ಬ್ಯಾಂಕ್ ದರೋಡೆ ಪ್ರಕರಣ:

ಆನೇಕಲ್ ಇನ್ಸ್‌ಪೆಕ್ಟರ್ ಶಾಸಕರಿಗೆ 80 ಲಕ್ಷ ರೂ. ಲಂಚ ನೀಡಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸಿ ಕೂಡಲೇ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ತಿಳಿಸಿದರು.

ವಿಜಯಪುರದ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಕಳವಾದ ಹಣ ಮತ್ತು ಚಿನ್ನದ ಪೈಕಿ ಶೇ.40-50ರಷ್ಟು ವಶಕ್ಕೆ ಪಡೆಯಲಾಗಿದೆ. ಒಂದು ಫೋನ್ ಸಹ ದೊರೆತಿದ್ದು, ಆರೋಪಿಗಳ ಶೀಘ್ರ ಬಂಧನಕ್ಕೆ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ಹೇಳಿದರು.

ಕಳೆದ 3 ವರ್ಷಗಳ ಹಿಂದಿನಕ್ಕಿಂತ ಈಗ ಕಾನೂನು ಸುವ್ಯವಸ್ಥೆ ಉತ್ತಮ: 

ಮತಗಳ್ಳತನದ ಕುರಿತು ಸದ್ಯ ಯಾವುದೇ ಎಸ್‌ಐಟಿ ರಚನೆಯ ಬಗ್ಗೆ ಚರ್ಚೆಯಾಗಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸಲು ಹೊಸದಾಗಿ 'ಡಿಸಿಆರ್‌ಐ ಸ್ಟೇಷನ್‌'ಗಳನ್ನು ಸ್ಥಾಪಿಸಲಾಗಿದ್ದು, ಅವುಗಳ ಕಾರ್ಯವೈಖರಿಯನ್ನು ಪರಿಶೀಲಿಸಲಾಗಿದೆ.