ಅತೃಪ್ತ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು ಇದೇ ವೇಳೆ ಬಿಜೆಪಿ ನಾಯಕರು ತಮ್ಮ ಆಟ ಆರಂಭಿಸಲು ಇತ್ತ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.
ಬೆಂಗಳೂರು : ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ವಿರೋಧಿಸಿ ಸದನದಲ್ಲೇ ಧರಣಿ ನಡೆಸಿದ ಪ್ರತಿಪಕ್ಷ ಬಿಜೆಪಿಯು ಆಡಳಿತಾರೂಢ ಪಕ್ಷಗಳ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಹೊರಬಂದ ಬಳಿಕ ತನ್ನ ಆಟ ಆರಂಭಿಸಲಿದೆ.
ಗುರುವಾರ ರಾಜ್ಯಪಾಲರ ಭಾಷಣ ವಂದನಾ ನಿರ್ಣಯದ ಮೇಲಿನ ಚರ್ಚೆಗೂ ಬಿಜೆಪಿ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದ್ದು, ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್ ಮಂಡನೆಗೂ ಪ್ರತಿಭಟನಾ ಧರಣಿ ಮೂಲಕ ಅಡ್ಡಿಪಡಿಸುವ ಸಂಭವವಿದೆ ಎಂದು ತಿಳಿದು ಬಂದಿದೆ.
ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅತೃಪ್ತ ಶಾಸಕರು ರಾಜೀನಾಮೆ ನೀಡಿದರೆ, ನಂತರ ಉದ್ಭವಿಸುವ ಬೆಳವಣಿಗೆಗಳನ್ನು ಆಧರಿಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮಧ್ಯೆ ಪ್ರವೇಶಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕೇವಲ ಮೂರ್ನಾಲ್ಕು ಅತೃಪ್ತ ಶಾಸಕರು ರಾಜೀನಾಮೆ ನೀಡಿದರೂ ಅದರಿಂದ ರಾಜ್ಯ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ಏನೂ ಆಗಲಾರದು. ಒಂದು ವೇಳೆ ವಿಧಾನಸಭೆಯ ಸ್ಪೀಕರ್ ಅವರು ಶಾಸಕರ ರಾಜೀನಾಮೆ ಸ್ವೀಕರಿಸಲು ನಿರಾಕರಿಸಿದರೆ ಅಥವಾ ಅಂಗೀಕರಿಸಲು ವಿಳಂಬ ತಂತ್ರ ಅನುಸರಿಸಿದೆ ಅಥವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮನವಿ ಮೇರೆಗೆ ಅತೃಪ್ತ ಶಾಸಕರ ಸದಸ್ಯತ್ವ ಅನರ್ಹಗೊಳಿಸುವ ಪ್ರಯತ್ನ ನಡೆದಲ್ಲಿ ಆಗ ಬಿಜೆಪಿ ನಾಯಕರು ಇಡೀ ಬೆಳವಣಿಗೆಗಳನ್ನು ಗಂಭೀರ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲವು ಅತೃಪ್ತ ಶಾಸಕರ ರಾಜೀನಾಮೆ ಮತ್ತಿತರ ಬೆಳವಣಿಗೆಗಳಿಂದ ಶಾಸಕಾಂಗ ವ್ಯವಸ್ಥೆಗೆ ತೀವ್ರ ಧಕ್ಕೆ ಉಂಟಾದಲ್ಲಿ ರಾಜ್ಯಪಾಲರು ಮಧ್ಯೆ ಪ್ರವೇಶಿಸಲು ಆಗ್ರಹಿಸಿ ರಾಷ್ಟ್ರಪತಿಗಳ ಆಳ್ವಿಕೆಗೆ ಮನವಿ ಮಾಡುವ ತಂತ್ರವೂ ಬಿಜೆಪಿ ನಾಯಕರ ಚಿಂತನೆಯಲ್ಲಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 7, 2019, 8:17 AM IST