ಹಾಸನ ಲೋಕಸಭಾ ಚುನಾವಣೆಯಲ್ಲಿ ಹಣ ಹಂಚಿಕೆ ಆರೋಪದ ಮೇಲೆ ಸಿಎಂ, ಡಿಕೆಶಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಬೆಂಗಳೂರು (ಆ.14): ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಪರ ಮತದಾರರಿಗೆ ಹಣ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇತರೆ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ವಕೀಲ ಹಾಗೂ ಹೊಳೆನರಸೀಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಜಯಗಳಿಸಿದ್ದಾರೆ. ಈ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಹಾಗೂ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಅವರು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರ ಸಮ್ಮುಖದಲ್ಲಿ ಶ್ರೇಯಸ್ ಪಟೇಲ್ ಪರ ಮತದಾರರಿಗೆ ತಲಾ 500 ರು. ಹಂಚಿಕೆ ಮಾಡುವಂತೆ ತೀರ್ಮಾನಿಸಿ ಬಳಿಕ ಹಣ ಹಂಚಿರುವ ಬಗ್ಗೆ ಮಾತನಾಡಿರುವ ಸಂಭಾಷಣೆಯ ಧ್ವನಿಸುರಳಿ ಎಲ್ಲಾ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದೆ. ಹೀಗಾಗಿ ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 123 ಮತ್ತು 99 ರ ಅಡಿ ಹಾಗೂ ಭ್ರಷ್ಟಾಚಾರ ಕಾಯ್ದೆ ಅಡಿ ಸಂಬಂಧಿತ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
Karnataka BJP lodges complaint with Guv against CM Siddaramaiah DCM DK Shivakumar over alleged poll-time cash distribution
ಎಸ್ಐಟಿ ತಂಡದಿಂದ ತನಿಖೆಗೆ ಮನವಿ:
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳಾದ ಬಿ.ಕೆ.ಸಿಂಗ್, ಸುಮನ್ ಡಿ. ಪನ್ನೇಕರ್ ಅವರನ್ನೊಳಗೊಂಡ ಅಧಿಕಾರಿಗಳ ಸಿಐಡಿ ಎಸ್ಐಟಿ ತಂಡ ರಚಿಸಿತ್ತು. ಈ ತಂಡ ಟರ್ಕಿ ಟೆಕ್ನಾಲಜಿ ಬಳಸಿ ಆರೋಪಿಯ ಧ್ವನಿ ಮತ್ತು ಚಿತ್ರಾವಳಿ ಕಂಡು ಹಿಡಿದು ಆತನ ಅಪರಾಧ ಸಾಬೀತುಪಡಿಸಿ, ಜೀವಾವಧಿ ಶಿಕ್ಷೆ ಕೊಡಿಸಿದೆ. ಹೀಗಾಗಿ ಈ ದಿಟ್ಟ ಹಾಗೂ ಪ್ರಾಮಾಣಿಕ ಅಧಿಕಾರಿಗಳ ತಂಡದಿಂದ ಪೆನ್ಡ್ರೈವ್ ಹಂಚಿಕೆ ಸಂಬಂಧ ಡಿ.ಕೆ.ಶಿವಕುಮಾರ್ ನನ್ನೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರಿಗೆ ಹಣ ಹಂಚಿಕೆ ಮಾಡುವ ಸಂಬಂಧ ಶಾಸಕ ಶಿವಲಿಂಗೇಗೌಡ ಮಾತನಾಡಿರುವ ಸಂಭಾಷಣೆಯ ಧ್ವನಿಸುರಳಿ ಕುರಿತು ತನಿಖೆ ನಡೆಸಬೇಕು. ಆರೋಪಿತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದ್ದಾರೆ.
