* ರಾಜ್ಯದಲ್ಲಿ ‘ಬುಲ್ಡೋಜರ್’ ಪರ-ವಿರೋಧ ಫೈಟ್* ದಂಗೆ ಹತ್ತಿಕ್ಕಲು ಬುಲ್ಡೋಜರ್ ಕಾನೂನು ಬೇಕು: ಬಿಜೆಪಿ* ಮೊದಲು ಲೂಟಿಕೋರರ ಮೇಲೆ, ರಾಮಸೇನೆ ಮೇಲೆ ಹತ್ತಿಸಿ: ಪ್ರತಿಪಕ್ಷ, ಬುಲ್ಡೋಜರ್ ಕಾಯ್ದೆ
ಬೆಂಗಳೂರು(ಏ.24): ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಪದೇ ಪದೇ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ನಷ್ಟವನ್ನುಂಟು ಮಾಡುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ದಂಗೆ ನಿಯಂತ್ರಿಸಲು ಬುಲ್ಡೋಜರ್ ಕಾನೂನನ್ನು ಜಾರಿಗೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಆಸ್ತಿ ನಾಶ, ಸರ್ಕಾರಿ ಕಚೇರಿ, ಪೊಲೀಸ್ ಠಾಣೆಗೆ ಬೆಂಕಿ ಹಾಕುವುದು, ನಾಗರಿಕರಲ್ಲಿ ಮತ್ತು ಪೊಲೀಸರಲ್ಲಿ ಆತ್ಮಸ್ಥೈರ್ಯ ಕುಂದಿಸುವ ಕೆಲಸಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಸಮ. ಯಾರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೋ, ಅಂತಹವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇದು ತಪ್ಪೇನೂ ಅಲ್ಲ. ಇದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.
‘ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಗಲಭೆ ನಿಯಂತ್ರಣಕ್ಕೆ ಕಠಿಣವಾದ ಕಾನೂನುಗಳಿವೆ. ಇದರಲ್ಲಿ ಯಾವುದೇ ಜಾತಿಮತ ಪಂಥಗಳ ಭೇದವಿಲ್ಲ. ಇತ್ತೀಚೆಗೆ ರಾಜಕೀಯ ಪ್ರೇರಿತ ಗಲಭೆಗಳು ಹೆಚ್ಚಾಗುತ್ತಿವೆ. ಚುನಾವಣಾ ವರ್ಷ ಆಗಿರುವುದರಿಂದ ಕೆಲಸು ಸಮಾಜಘಾತಕ ಶಕ್ತಿಗಳು ಗಲಭೆಗಳನ್ನು ಸೃಷ್ಟಿಮಾಡುತ್ತಾರೆ. ಇದರ ವಿರುದ್ಧ ಕಠಿಣವಾದ ಕಾನೂನುಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಯಾರೇ ಇರಲಿ ದಂಗೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡರೂ ತಪ್ಪಿಲ್ಲ’ ಎಂದು ಅಭಿಪ್ರಾಯಪಟ್ಟರು.
+++
‘ಕಾಂಗ್ರೆಸ್ ಕಾಲೆಳೆಯುವ, ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಗಲಭೆ ಮೂಲಕ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ವಿಫಲವಾಗಿದೆ. ಮತೀಯವಾದದ ಹೆಸರಲ್ಲಿ ಬೆಂಕಿ ಹಾಕುವ ಕೆಲಸವನ್ನು ಮಾಡುತ್ತಿದೆ. ಅಧಿಕಾರ ಪಡೆಯಲು ಅರಾಜಕತೆ ಸೃಷ್ಟಿಸುವ ಪ್ರವೃತ್ತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣ, ಹರ್ಷ ಕೊಲೆ ಪ್ರಕರಣ, ಹುಬ್ಬಳ್ಳಿ ಹಿಂಸಾಚಾರದ ಘಟನೆ ಇದಕ್ಕೆ ಉದಾಹರಣೆ. ಭಿಂದ್ರನ್ವಾಲೆ, ದಾವೂದ್ ಇಬ್ರಾಹಿಂಗೆ ಬೆಂಬಲ ಕೊಡುವ ಮೂಲಕ ಕಾಂಗ್ರೆಸ್ ಪಕ್ಷವು ಭಯೋತ್ಪಾದನೆ ಮತ್ತು ಭ್ರಷ್ಟಾಚಾರಕ್ಕೂ ಪ್ರೇರಣೆ ನೀಡಿದೆ. ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯಲು ಹವಣಿಸುತ್ತಿದೆ’ ಎಂದು ಟೀಕಾಪ್ರಹಾರ ನಡೆಸಿದರು.
‘ನೆಹರೂವಿನಿಂದ ಹಿಡಿದು ಮನಮೋಹನ್ ಸಿಂಗ್ವರೆಗೆ ಎಲ್ಲರ ಅಧಿಕಾರದ ಸಂದರ್ಭದಲ್ಲಿಯೂ ಒಟ್ಟು ನಾಲ್ಕು ಲಕ್ಷ ಕೋಟಿ ರು.ಗಿಂತ ಹೆಚ್ಚು ಮೊತ್ತದ ಭ್ರಷ್ಟಾಚಾರ ಹಗರಣಗಳು ನಡೆದಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಚಾರದ ಗಂಗೋತ್ರಿ ಎಂಬಂತಾಗಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕಾಲಹೊರತುಪಡಿಸಿ ಇತರ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಒಂದಿಲ್ಲೊಂದು ಭ್ರಷ್ಟಾಚಾರ ಪ್ರಕರಣಗಳು ನಡೆದಿವೆ. ಕಾಂಗ್ರೆಸ್ ಮುಕ್ತ ಭಾರತ ಎಂದರೆ ಭ್ರಷ್ಟಾಚಾರದಿಂದ ಮುಕ್ತಿ ಎಂಬ ಅರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ’ ಎಂದರು
