ರಾಜ್ಯದಾದ್ಯಂತ 22 ವಿಧಾನಸಭಾ ಕ್ಷೇತ್ರಗಳಲ್ಲಿ 40 ಅಲ್ಪಸಂಖ್ಯಾತ ಕಾಲನಿಗಳ ಅಭಿವೃದ್ಧಿಗೆ 398 ಕೋಟಿ ರೂ. ಅನುದಾನವನ್ನು ನೀಡುವುದಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಸೂಚಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣ, ಆರೋಗ್ಯ, ಮತ್ತು ರಸ್ತೆ ಸುಧಾರಣೆಗೆ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು (ಸೆ.11): ರಾಜ್ಯದಾದ್ಯಂತ 22 ವಿಧಾನಸಭಾ ಕ್ಷೇತ್ರಗಳಲ್ಲಿ 40 ಅಲ್ಪಸಂಖ್ಯಾತರು ವಾಸಿಸುತ್ತಿರುವ ಅಲ್ಪಸಂಖ್ಯಾತರ ಕಾಲನಿಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಒಟ್ಟು ₹398 ಕೋಟಿ ಅನುದಾನವನ್ನು ನೀಡಲು ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ, ಆರೋಗ್ಯ ಕ್ಷೇತ್ರದ ಸುಧಾರಣೆ, ಮತ್ತು ರಸ್ತೆ ಸಂಪರ್ಕ ಸುಧಾರಣೆಗೆ ಸಂಬಂಧಿಸಿದಂತೆ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

Add Asianetnews Kannada as a Preferred SourcegooglePreferred

ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ ಆದ್ಯತೆ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳ ಅತಿ ಹಿಂದುಳಿದ 40 ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಅಭಿವೃದ್ಧಿಪಡಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಒಟ್ಟು ₹398 ಕೋಟಿ ಅಂದಾಜು ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಯೋಜನೆ ಜಾರಿಯಾಗಲಿದೆ.

ಮೂಲಸೌಕರ್ಯ ವಲಯಕ್ಕೆ ಒತ್ತು:

ಯಲ್ಲಾಪುರ ಸೇತುವೆ ನಿರ್ಮಾಣ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಗುಳ್ಳಾಪುರ ಮತ್ತು ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಗಂಗಾವಳಿ ನದಿಗೆ ₹35 ಕೋಟಿ ಅಂದಾಜು ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ವಿಜಯಪುರ ವಿಮಾನ ನಿಲ್ದಾಣ: ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಗಳ ಪರಿಷ್ಕೃತ ಅಂದಾಜು ಮೊತ್ತವಾದ ₹618.75 ಕೋಟಿಗೆ ಅನುಮೋದನೆ ನೀಡುವ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವರದಿ ಪಡೆದುಕೊಳ್ಳಲು ಸಂಪುಟ ನಿರ್ಧರಿಸಿದೆ.

ಆರೋಗ್ಯ ಕ್ಷೇತ್ರದ ಸುಧಾರಣೆಗೆ ಆದ್ಯತೆ

ವಿಕ್ಟೋರಿಯಾ ಆಸ್ಪತ್ರೆ: ಹೊಸ ವಾರ್ಡ್‌ಗಳಿಗೆ ಪೀಠೋಪಕರಣ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಿರುವ 1000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‌ಗಳಿಗೆ ₹20.05 ಕೋಟಿ ವೆಚ್ಚದಲ್ಲಿ ಪೀಠೋಪಕರಣಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ.

ಆಸ್ಪತ್ರೆಗಳ ನವೀಕರಣ: ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ, ಮತ್ತು ಸವದತ್ತಿ ತಾಲ್ಲೂಕು ಆಸ್ಪತ್ರೆಗಳ ಜೊತೆಗೆ ದಾವಣಗೆರೆ ಮತ್ತು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗಳ ನವೀಕರಣಕ್ಕೆ ₹542 ಕೋಟಿ ಅನುಮೋದನೆ ನೀಡಲಾಗಿದೆ.

ಸಂಚಾರಿ ಆರೋಗ್ಯ ಘಟಕಗಳ ಉನ್ನತೀಕರಣ: ಸಂಚಾರಿ ಆರೋಗ್ಯ ಘಟಕಗಳನ್ನು ದುರಸ್ತಿಗೊಳಿಸಿ, ಹೊಸ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲು ₹12.25 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ. ಈ ವಾಹನಗಳ ವಾರ್ಷಿಕ ನಿರ್ವಹಣೆಗೆ ₹14.70 ಕೋಟಿ ಅನುಮೋದನೆ ದೊರೆತಿದೆ.

ಇತರ ಪ್ರಮುಖ ತೀರ್ಮಾನಗಳು

  • PM KUSUM-B ಯೋಜನೆ: PM KUSUM-B ಯೋಜನೆಯಡಿ ರೈತರ ಪಂಪ್‌ಸೆಟ್‌ಗಳ ವೆಚ್ಚದ ಶೇ.50ರಷ್ಟು ಮೊತ್ತವನ್ನು ರಾಜ್ಯ ಸರ್ಕಾರದಿಂದ ಸಹಾಯಧನವಾಗಿ ನೀಡಲು ಒಪ್ಪಿಗೆ ಸೂಚಿಸಲಾಗಿದೆ.
  • ಬಯೋಡೀಸೆಲ್ ಮಿಶ್ರಣ: ಕರ್ನಾಟಕ ರಾಜ್ಯದಲ್ಲಿ ಬಯೋಡೀಸೆಲ್ ಅನ್ನು ಹೈಸ್ಪೀಡ್ ಡೀಸೆಲ್‌ನೊಂದಿಗೆ ಮಿಶ್ರಣ ಮಾಡುವ ಪರವಾನಗಿ ಆದೇಶ 2025ಕ್ಕೆ ಅನುಮೋದನೆ ನೀಡಲಾಗಿದೆ.
  • ಸರ್ಕಾರಿ ಕಾರ್ಯಕ್ರಮಗಳಲ್ಲಿ ಅತಿಥಿಗಳ ಆಹ್ವಾನ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನಿಷ್ಠ 9 ಮತ್ತು ಗರಿಷ್ಠ 13 ಅತಿಥಿಗಳನ್ನು ಆಹ್ವಾನಿಸುವ ಮಾರ್ಗಸೂಚಿಯನ್ನು ಬದಲಾಯಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಮಹತ್ವದ ಆಧಾರದ ಮೇಲೆ ಹೆಚ್ಚಿನ ಅತಿಥಿಗಳನ್ನು ಆಹ್ವಾನಿಸಲು ಅಧಿಕಾರ ನೀಡಲು ಸಂಪುಟ ಒಪ್ಪಿಗೆ ನೀಡಿದೆ.