ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ ಶಮನಗೊಳಿಸಲು, ರಾಜ್ಯ ಸರ್ಕಾರವು ಅವರ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 600 ಕೋಟಿ ರೂಪಾಯಿಗಳ ಬೃಹತ್ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯು 2026-27 ಮತ್ತು 2027-28ನೇ ಸಾಲಿನಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನಂತಹ ಸೌಲಭ್ಯಗಳನ್ನು ಒದಗಿಸುವ ಗುರಿ ಹೊಂದಿದೆ.

ಬೆಂಗಳೂರು (ಏ.30): ಅಲ್ಪಸಂಖ್ಯಾತ ಸಮುದಾಯದಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಶಮನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗಾಗಿ ಬರೋಬ್ಬರಿ 600 ಕೋಟಿ ರೂಪಾಯಿಗಳ ಬೃಹತ್ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಈ ಹಣ ಬಳಕೆಯಾಗಲಿದೆ.

Add Asianetnews Kannada as a Preferred SourcegooglePreferred

2026-27 ಮತ್ತು 2027-28ನೇ ಸಾಲಿನಲ್ಲಿ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು 600 ಕೋಟಿ ರೂಪಾಯಿಗಳ ಬೃಹತ್ 'ಕ್ರಿಯಾ ಯೋಜನೆ'ಯನ್ನು ರೂಪಿಸಲಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಲ್ಪಸಂಖ್ಯಾತ ಕಾಲೋನಿಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದ ಸಮುದಾಯದ ಮುನಿಸನ್ನು ತಣಿಸಲು ಮತ್ತು ವಿಶ್ವಾಸಕ್ಕೆ ತೆಗೆದುಕೊಳ್ಳಲು ಈ 'ಬಂಪರ್ ಆಫರ್' ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಚಿವ ಸಂಪುಟದ ಈ ನಿರ್ಧಾರವು ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಲಿದೆ ಎಂದು ಸರ್ಕಾರ ಭಾವಿಸಿದೆ.