ಕೋವಿಡ್‌ ಸಂಕಷ್ಟದ ಸಮಯದಲ್ಲಿ ನೀಡಿದ ಭರವಸೆಯಂತೆ ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ಗ್ರಾಮದಲ್ಲಿ .209.80 ಕೋಟಿ ವೆಚ್ಚದಲ್ಲಿ 250 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 

ಬೆಂಗಳೂರು (ಅ.21): ಕೋವಿಡ್‌ ಸಂಕಷ್ಟದ ಸಮಯದಲ್ಲಿ ನೀಡಿದ ಭರವಸೆಯಂತೆ ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ಗ್ರಾಮದಲ್ಲಿ .209.80 ಕೋಟಿ ವೆಚ್ಚದಲ್ಲಿ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Add Asianetnews Kannada as a Preferred SourcegooglePreferred

250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಕಟ್ಟಡದ ಜತೆಗೆ ಆಸ್ಪತ್ರೆ ಮತ್ತು ಸಿಬ್ಬಂದಿ ವರ್ಗದವರಿಗೆ ವಸತಿ ಗೃಹ, ಲ್ಯಾಬ್‌ಗಳನ್ನು ನಿರ್ಮಿಸಲು ಉದ್ದೇಶೀಸಲಾಗಿದೆ. ಎರಡು ಹಂತದಲ್ಲಿ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. 100 ಕೋಟಿ ವೆಚ್ಚದಲ್ಲಿ ನೆಲಮಹಡಿ ಒಳಗೊಂಡಂತೆ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು, ಎರಡನೇ ಹಂತದಲ್ಲಿ 4 ಮತ್ತು 5ನೇ ಮಹಡಿ, ವಸತಿ ಗೃಹಗಳು ಮೂಲಭೂತ ಸೌಕರ್ಯ ಕಾಮಗಾರಿಗಳು, ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳು ಒಳಗೊಂಡಿರುತ್ತದೆ.

ಎಸ್ಸಿ, ಎಸ್ಟಿ ಮೀಸಲು ಹೆಚ್ಚಳಕ್ಕೆ ಸುಗ್ರೀವಾಜ್ಞೆ: ಸಂಪುಟ ನಿರ್ಧಾರ

ಬಿಡಿಎ ಅಭಿವೃದ್ಧಿಪಡಿಸಿರುವ ಸರ್‌ ಎಂ.ವಿಶ್ವೇಶ್ವರಯ್ಯ ಬಡಾವಣೆಯ 3ನೇ ಬ್ಲಾಕ್‌ನ 80 ಅಡಿ ರಸ್ತೆಯ ಉಲ್ಲಾಳು ಮುಖ್ಯರಸ್ತೆಯಲ್ಲಿರುವ ಸಿಎ-1 (ಸರ್ವೇ ನಂ. 150/1ರಲ್ಲಿ) 10,525 ಚದರ ಅಡಿಗಳ ಜಾಗವನ್ನು ಸರ್ಕಾರಿ ಆಸ್ಪತ್ರೆಗೆ ಮೀಸಲಿರಿಸಲಾಗಿದೆ. ಈ ಜಾಗದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಇದಕ್ಕಾಗಿ ಬಿಡಿಎ .8.50 ಕೋಟಿಯನ್ನು ಕೂಡ ಆಸ್ಪತ್ರೆ ನಿರ್ಮಾಣದ ಮೊದಲ ಹಂತದಲ್ಲಿ ಪಾವತಿಸಲು ಉದ್ದೇಶಿಸಲಾಗಿದೆ. ಉಲ್ಲಾಳು ಗ್ರಾಮದಲ್ಲಿ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗುವುದರಿಂದ ಬೆಂಗಳೂರು ನಗರದ ಪಶ್ಚಿಮ ಭಾಗದ ಜನತೆಗೆ ಸಾಕಷ್ಟುಅನುಕೂಲವಾಗಲಿದೆ ಎಂದು ಸ್ಥಳೀಯ ಶಾಸಕರೂ ಆಗಿರುವ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಉಲ್ಲಾಳು ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣವಾಗುವುದರಿಂದ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮಾಗಡಿ, ಕುಣಿಗಲ್‌, ಪೀಣ್ಯ, ದಾಬಸ್‌ಪೇಟೆ ಭಾಗದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗಲಿದೆ. ಮಾತ್ರವಲ್ಲದೇ, ಈ ಆಸ್ಪತ್ರೆ ನಿರ್ಮಾಣದಿಂದ ಮುಂದಿನ ದಿನದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಾಕಷ್ಟು ಉದ್ಯೋಗಗಳು ಸಹ ಸೃಷ್ಟಿಯಾಗಲಿದೆ ಎಂದಿದ್ದಾರೆ.

ನೀರುಗಾಲುವೆ ಅಭಿವೃದ್ಧಿಗೆ 1500 ಕೋಟಿ ಅನುದಾನ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಬೃಹತ್‌ ಮಳೆ ನೀರುಗಾಲುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ 1500 ಕೋಟಿ ಅಂದಾಜು ಮೊತ್ತ ಕ್ರಿಯಾಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ಸಿಕ್ಕಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ತೀವ್ರ ಮಳೆಯಿಂದಾಗಿರುವ ಅನಾಹುತ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ಕಾರ ಮುಂದಾಗಿದೆ. 

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಗೆ ಚಿಂತನೆ: ಸಚಿವ ಎಂಟಿಬಿ ನಾಗರಾಜ್‌

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್‌ ಮಳೆ ನೀರುಗಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು .1500 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದರು. ಇನ್ನು, ನಗರದ ಜೆ.ಪಿ.ನಗರದ ಎರಡನೇ ಹಂತದಲ್ಲಿನ ತಿರುಮಲ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಸಂಸ್ಥೆಗೆ ನೀಡಿರುವ 31,215 ಚ.ಅ. ಬಿಬಿಎಂಪಿ ಜಾಗದ ಗುತ್ತಿಗೆ ಅವಧಿಯನ್ನು 2001ರ ಏ.1ರಿಂದ ಅನ್ವಯವಾಗುವಂತೆ 30 ವರ್ಷಗಳ ಅವಧಿಗೆ ನವೀಕರಿಸಲು ಒಪ್ಪಿಗೆ ದೊರೆತಿದೆ ಎಂದು ಹೇಳಿದರು.