ಸುಳ್ಳು ಸುದ್ದಿ ಪತ್ತೆ ವಿಶೇಷ ತಂಡ. ಬೆಂಗಳೂರಿನಲ್ಲಿ 3 ಹಂತದಲ್ಲಿ ತಂಡ ರಚನೆ. ಆಯುಕ್ತರ ಕಚೇರಿಯಲ್ಲಿ ದೊಡ್ಡ ತಂಡ ಕೆಲಸ. ಪ್ರತಿ ಠಾಣೆಯಲ್ಲಿ 1, ಡಿಸಿಪಿ ಕಚೇರಿಯಲ್ಲಿ ಮತ್ತೊಂದು ತಂಡ ಕಾರ್ಯಾಚರಣೆ.

ಬೆಂಗಳೂರು (ಆ.27): ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾಕಾರಿ ಸುದ್ದಿ ಹರಿ ಬಿಡುವವರ ಮೇಲೆ ನಿಗಾವಹಿಸಲು ಠಾಣಾ ಮಟ್ಟದಿಂದ ಆಯುಕ್ತರ ಮಟ್ಟದಲ್ಲಿ ಮೂರು ಹಂತದ ವಿಶೇಷ ತಂಡ ರಚಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಲವೊಂದು ಪೋಸ್ಟ್‌ಗಳೇ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ಮೇಲೆ ನಿಗಾ ವಹಿಸಲಾಗುವುದು ಎಂದರು.

Add Asianetnews Kannada as a Preferred SourcegooglePreferred

ಮೂರು ವಿಶೇಷ ತಂಡಗಳು: ಕೆಲವೊಂದು ವಿಷಯಗಳಲ್ಲಿ ಕಂಡು ಬರುವ ವಿರೋಧ, ಪ್ರಚೋದನಾಕಾರಿ ಹಾಗೂ ತಪ್ಪು ಮಾಹಿತಿಯ ಪೋಸ್ಟ್‌ಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಈಗ ಬೆಂಗಳೂರು ನಗರದಲ್ಲಿ ಠಾಣಾ ಮಟ್ಟದಿಂದ ಆಯುಕ್ತರ ಕಚೇರಿವರೆಗೆ ಮೂರು ಹಂತದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ಠಾಣೆಯಲ್ಲಿ ತಾಂತ್ರಿಕವಾಗಿ ಪರಿಣಿತಿ ಹೊಂದಿರುವ ಇಬ್ಬರು ಸಿಬ್ಬಂದಿ ಆಯ್ಕೆ ಮಾಡಿ ತಂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಪ್ರಚೋದನಾಕಾರಿ ಹಾಗೂ ವಿರೋಧ ಪೋಸ್ಟ್‌ಗಳನ್ನು ಆ ಸಿಬ್ಬಂದಿ ಪತ್ತೆ ಹಚ್ಚಿ ಮಾಹಿತಿ ನೀಡಲಿದ್ದಾರೆ. ಇದೇ ರೀತಿ ಡಿಸಿಪಿ ಕಚೇರಿಯಲ್ಲಿ ಮತ್ತೊಂದು ಸಣ್ಣ ಮಟ್ಟದ ತಂಡ ಹಾಗೂ ಆಯುಕ್ತರ ಕಚೇರಿಯಲ್ಲಿ ದೊಡ್ಡ ಮಟ್ಟದ ತಂಡ ಕಾರ್ಯನಿರ್ವಹಿಸಲಿವೆ ಎಂದು ಆಯುಕ್ತರು ವಿವರಿಸಿದರು.

ಬೆಂಗಳೂರು: ಹುಟ್ಟುಹಬ್ಬದ ಖುಷಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಕೆರೆಗೆ ಈಜಲು ಹೋದವರು ಸಾವು

ಈ ಮೂರು ತಂಡಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುವ ಸುಳ್ಳು ಸುದ್ದಿಗಳನ್ನು ಕೂಡಲೇ ಪರಿಶೀಲಿಸಲಾಗುತ್ತದೆ. ಫ್ಯಾಕ್ಟ್ ಚೆಕ್‌ ಮಾಡಿ ಸತ್ಯಾಸತ್ಯತೆ ಜನರಿಗೆ ಮನವರಿಕೆ ಮಾಡಿಕೊಡುತ್ತವೆ. ಈಗಾಗಲೇ ಸಿಬ್ಬಂದಿಗೆ ಸುಳ್ಳು ಸುದ್ದಿಗಳನ್ನು ಯಾವ ರೀತಿ ಪತ್ತೆ ಹಚ್ಚಬೇಕು ಎಂಬ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಠಾಣಾ ಮಟ್ಟದ ತಂಡ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಬರಹಗಳ ಬಗ್ಗೆ ಡಿಸಿಪಿ ಕಚೇರಿಯ ತಂಡಕ್ಕೆ ಮಾಹಿತಿ ನೀಡಲಿವೆ. ಆ ತಂಡ ಆಯುಕ್ತರ ಕಚೇರಿಯ ಘಟಕಕ್ಕೆ ವರದಿ ಮಾಡಲಿದೆ. ಆಯುಕ್ತರ ಕಚೇರಿಯಲ್ಲಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕದಲ್ಲಿ ನುರಿತ ಸೈಬರ್‌ ತಜ್ಞರು ಸಹ ಇರಲಿದ್ದು, ಇಲ್ಲಿ ಅತ್ಯಾಧುನಿಕ ಸಲಕರಣೆಗಳನ್ನು ಸಹ ಒದಗಿಸಲಾಗಿದೆ. ತಪ್ಪು ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ. ನಕಲಿ ಖಾತೆಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಬೆಂಗಳೂರು: ಮದ್ಯಪಾನ ಮಾಡಿ ಲಾರಿ ಚಲಾವಣೆ, ಸಿಕ್ಕ ಸಿಕ್ಕ ವಾಹನಗಳಿಗೆ ಗುದ್ದಿ ಸರಣಿ

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವ ಅಥವಾ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಾರ್ವಜನಿಕರಲ್ಲಿ ಆಂತಕ ಉಂಟು ಮಾಡುವವರ ಮೇಲೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

-ಬಿ.ದಯಾನಂದ್‌, ಪೊಲೀಸ್‌ ಆಯುಕ್ತ, ಬೆಂಗಳೂರು ನಗರ