ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. 

ವಿಜಯನಗರ (ಜು.13): ಕರ್ನಾಟಕದ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದಿದೆ. ಈ ಬಾರಿಯ ಕಾರ್ಣಿಕ ನುಡಿಯಲ್ಲಿ ಕಾಂಗ್ರೆಸ್ ಸರ್ಕಾರದ ಒಡನಾಟದ ಬಗ್ಗೆ ಸ್ಫೋಟಕ ಹೇಳಿಕೆ ಬಂದಿದ್ದು, ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ ಎಂದು ಗೊರವಯ್ಯ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ, ‘ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಎಂಬ ನುಡಿಯನ್ನು ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಮರು ವಿಶ್ಲೇಷಿಸಿದ್ದಾರೆ. ’ಕಾಂಗ್ರೆಸ್ ಸರ್ಕಾರ ಒಂದು ತುಂಬಿದ ಕೊಡದಂತೆ. ಇದರಲ್ಲಿನ ಶಾಸಕರ ಮನಸ್ಸು ಕದಲಿದರೆ, ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿ ಆಗಲಿದೆ,' ಎಂದು ಅವರು ವಿವರಿಸಿದ್ದಾರೆ. ಈ ಕಾರ್ಣಿಕ ನುಡಿ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಸಿಎಂ ಬದಲಾವಣೆಯ ಚರ್ಚೆಗೆ ಗ್ರಾಸವಾಗಿದೆ.

ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗವಿದೆ ಎಂದು ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ. ಆದರೆ, ಈ ಹಿಂದೆ ಡಿ.ಕೆ. ಶಿವಕುಮಾರ್ ಕಾರ್ಣಿಕ ಆಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿದ್ದಕ್ಕೆ ಮೈಲಾರಲಿಂಗೇಶ್ವರ ಮುನಿಸಿಕೊಂಡಿದ್ದರಿಂದ, ಅವರು ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ಕೊಡುಗೆಯಾಗಿ ನೀಡಿದ್ದರು ಎಂಬುದು ಗಮನಾರ್ಹ.

ಕಾಂಗ್ರೆಸ್‌ನ ಆಂತರಿಕ ರಾಜಕೀಯದಲ್ಲಿ ಈ ಕಾರ್ಣಿಕ ಭವಿಷ್ಯ ಹೊಸ ತಿರುವು ತಂದೀತೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ. ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯ ಈ ಭವಿಷ್ಯ ಕರ್ನಾಟಕದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.