ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಉನ್ನತ ಮಟ್ಟದ ಸಭೆಯ ಬಳಿಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಎಲ್ಲಾ ವದಂತಿಗಳನ್ನು ಅವರು ತಳ್ಳಿಹಾಕಿದ್ದಾರೆ.

ನವದೆಹಲಿ (ಮೇ.26): ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಎಲ್ಲಾ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇದರಲ್ಲಿ ಯಾವುದೇ ವಾಸ್ತವ ಸತ್ಯವಿಲ್ಲ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇಂದು ನಾವು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ಸುದೀರ್ಘ ಹಾಗೂ ವಿವರವಾದ ಸಭೆಯನ್ನು ನಡೆಸಿದ್ದೇವೆ. ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹಾಗೂ ನಾನು ಭಾಗಿಯಾಗಿದ್ದೆವು" ಎಂದು ತಿಳಿಸಿದರು.

Add Asianetnews Kannada as a Preferred SourcegooglePreferred

ಸಭೆಯ ಅಸಲಿ ಅಜೆಂಡಾ ಬಹಿರಂಗಪಡಿಸಿದ ವೇಣುಗೋಪಾಲ್

ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಸಂಪೂರ್ಣ ವಿವರ ನೀಡಿದ ಕೆ.ಸಿ. ವೇಣುಗೋಪಾಲ್, "ನಮ್ಮ ಇಡೀ ಸಭೆಯ ಚರ್ಚೆ ಪ್ರಮುಖವಾಗಿ ಕರ್ನಾಟಕದಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಮೇಲಷ್ಟೇ ಕೇಂದ್ರೀಕೃತವಾಗಿತ್ತು. ಇದನ್ನು ಬಿಟ್ಟು ನೀವು ಮಾಡುತ್ತಿರುವ ಎಲ್ಲಾ ಚರ್ಚೆಗಳು ಕೇವಲ ನಿಮ್ಮ ಊಹೆಗಳಷ್ಟೇ; ಅದಕ್ಕೂ ವಾಸ್ತವಕ್ಕೂ ಯಾವುದೇ ಸಂಬಂಧವಿಲ್ಲ" ಎಂದು ಸ್ಪಷ್ಟಪಡಿಸಿದರು.

ಇತರ ರಾಜ್ಯಗಳ ಜೊತೆಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

"ಕರ್ನಾಟಕದ ರಾಜ್ಯಸಭಾ ಮತ್ತು ವಿಧಾನ ಪರಿಷತ್ ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಇತರ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯೊಂದಿಗೇ ಅಧಿಕೃತವಾಗಿ ಪ್ರಕಟಿಸಲಾಗುವುದು. ಇಂದಿನ ಸಭೆಯಲ್ಲಿ ನಾವು ಈ ವಿಷಯವನ್ನು ಮಾತ್ರ ತೀರ್ಮಾನಿಸಿದ್ದೇವೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಚರ್ಚೆ ನಡೆದಿಲ್ಲ" ಎಂದು ಹೇಳುವ ಮೂಲಕ ಸಿಎಂ ಕುರ್ಚಿ ಬದಲಾವಣೆಯ ಊಹಾಪೋಹಗಳಿಗೆ ಅವರು ಸಂಪೂರ್ಣ ತೆರೆ ಎಳೆದಿದ್ದಾರೆ.