Belagavi assembly session: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಲೆ, ಅವಿಶ್ವಾಸ ಮಂಡನೆ ಸೇರಿದಂತೆ ವಿಪಕ್ಷಗಳ ದಾಳಿಯನ್ನು ಎದುರಿಸುವ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ.

 ಬೆಂಗಳೂರು (ಡಿ.4): ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಕಾರ್ಯತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಮುಗಿದ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲೇನು ಚರ್ಚೆ?

ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ ಮತ್ತಿತರ ವಿಷಯ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿ ತಿರುಗೇಟು ನೀಡಬೇಕು ಎಂಬ ಬಗ್ಗೆ ಸಚಿವರ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಸಬೇಕು ಎಂಬ ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಡಿ.8 ರಿಂದ ಅಧಿವೇಶನ ಶುರು:

ಡಿ.8 ರಿಂದ ಅಧಿವೇಶನ ಶುರುವಾಗಲಿದ್ದು, ಅಧಿವೇಶನ ಶುರುವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ಶಾಸಕರು, ಪರಿಷತ್‌ ಸದಸ್ಯರು ಎಲ್ಲರೂ ಹೇಗೆ ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು ಎಂದು ಚರ್ಚಿಸಲಿದ್ದಾರೆ.