ಶಿಕ್ಷಣ ಸಚಿವರಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನೆ ಬಿಚ್ಚಿಟ್ಟ ಬಿ.ಸಿ.ನಾಗೇಶ್
ಶಿಕ್ಷಣ ಇಲಾಖೆಯ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಇಲಾಖೆಯಲ್ಲಿ ಸಾಕಷ್ಟುಸುಧಾರಣೆ, ಬದಲಾವಣೆ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ಒಂದು ವರ್ಷದ ಆಡಳಿತ ನನಗೆ ತೃಪ್ತಿ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರು (ಆ.09): ಶಿಕ್ಷಣ ಇಲಾಖೆಯ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಇಲಾಖೆಯಲ್ಲಿ ಸಾಕಷ್ಟುಸುಧಾರಣೆ, ಬದಲಾವಣೆ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ಒಂದು ವರ್ಷದ ಆಡಳಿತ ನನಗೆ ತೃಪ್ತಿ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆ.7ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಚಿವರು ಇಲಾಖೆಯಲ್ಲಿ ತಾವು ಕೈಗೊಂಡಿರುವ ಪ್ರಗತಿ ಕಾರ್ಯಗಳ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಒಂದು ವರ್ಷ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಇಡೀ ದೇಶದಲ್ಲೇ ಮೊದಲ ಬಾರಿಗೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಯಿತು. ತರಗತಿಗಳನ್ನು ಯಶಸ್ವಿಯಾಗಿ ನಡೆಸಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಕೂಡ ಸೂಸೂತ್ರವ ನಡೆಸಿ ಉತ್ತಮ ಫಲಿತಾಂಶ ನೀಡಲಾಯಿತು. ಈ ವಿಚಾರದಲ್ಲಿ ಇಡೀ ಶಿಕ್ಷಣ ಇಲಾಖೆ ಅದರಲ್ಲೂ ಶಿಕ್ಷಕರ ಪಾತ್ರ ಅತ್ಯಂತ ಶ್ಲಾಘನೀಯ ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಅಮೂಲ್ಯ ಬದಲಾವಣೆಗೆ ಎನ್ಇಪಿ ಜಾರಿ: ಸಚಿವ ಬಿ.ಸಿ.ನಾಗೇಶ್
ಇನ್ನು, ಕೋವಿಡ್ನಿಂದ ಮಕ್ಕಳಲ್ಲಿ ಉಂಟಾಗಿದ್ದ ಕಲಿಕಾ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದು ಯಶಸ್ವಿಯಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ ಮೆಚ್ಚುಗೆಗೂ ಪಾತ್ರವಾಗಿದೆ. ಶಾಲಾ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಅನುಷ್ಠಾನಕ್ಕೆ ಕ್ರಮ ವಹಿಸಲಾಗುತ್ತಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಿ 23 ಸಾವಿರ ಶಿಕ್ಷಕರಿಗೆ ವರ್ಗಾವಣೆ ನೀಡಲಾಗಿದೆ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 8,101 ಕೊಠಡಿ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಅವರ ಗೌರವಧವನ್ನು 2500 ರು. ಹೆಚ್ಚಿಸಲಾಗಿದೆ. 3700ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡು ಅವರ ಗೌರವಧನವನ್ನು 3,000 ರು., ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆಯನ್ನು 1 ಸಾವಿರ ರು. ಹೆಚ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ. 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ‘ಪ್ರಧಾನಮಂತ್ರಿ ಪೋಷಣ್ ಶಕ್ತಿ ಅಭಿಯಾನ’ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಸರ್ಕಾರಿ ಶಾಲೆ ಮಕ್ಕಳಿಗೆ ಈ ಸಲ ಬ್ರ್ಯಾಂಡೆಡ್ ಶೂ ಇಲ್ಲ: ಸಚಿವ ಬಿ.ಸಿ.ನಾಗೇಶ್
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯಲು ಶಾಲಾ ವಾಹನ ಖರೀದಿಗೆ ‘ಶಾಸಕರ ಪ್ರದೇಶಾಭಿವೃದ್ಧಿ ನಿಧಿ’ ಬಳಸಿಕೊಳ್ಳಲು ಅನುಮತಿಸಲಾಗಿದೆ. ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಅವರ ಸೇವಾನುಭವದ ಆಧಾರದ ಮೇಲೆ ಮುಂಬಡ್ತಿ ಬೇಡಿಕೆ ಈಡೇರಿಸಲಾಗುತ್ತಿದೆ. ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರ ಪೂರ್ವದಲ್ಲಿ ಖಾಲಿಯಾಗಿರುವ 2 ಸಾವಿರಕ್ಕೂ ಹೆಚ್ಚು ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಶಾಲೆಗಳ ಕಟ್ಟಡಗಳ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಪ್ರಕ್ರಿಯೆ ಸರಳೀಕರಿಸಲಾಗಿದೆ ಎಂದು ಸಚಿವ ನಾಗೇಶ್ ಅವರು ತಿಳಿಸಿದ್ದಾರೆ.