ಕರ್ನಾಟಕ ಸುವರ್ಣ ಮಹೋತ್ಸವವನ್ನು ಒಂದು ವರ್ಷವಿಡಿ ರಾಜ್ಯಾದ್ಯಂತ ಸಾಂಸ್ಕೃತಿಕ ಮತ್ತು ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಬೆಂಗಳೂರು (ಆ.10) : ಕರ್ನಾಟಕ ಸುವರ್ಣ ಮಹೋತ್ಸವವನ್ನು ಒಂದು ವರ್ಷವಿಡಿ ರಾಜ್ಯಾದ್ಯಂತ ಸಾಂಸ್ಕೃತಿಕ ಮತ್ತು ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಹೋತ್ಸವ ಕುರಿತು ಕಾರ್ಯಕ್ರಮಗಳ ರೂಪುರೇಷೆಗಳ ರೂಪಿಸಲು ಸಾಹಿತಿ, ರಂಗಕರ್ಮಿಗಳು, ಕಲಾವಿದರೊಂದಿಗೆ ಸಮಲೋಚನೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಹಲವು ಉತ್ತಮ ಸಲಹೆಗಳು ಬಂದಿವೆ. ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಬಜೆಟ್‌ನಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವರ್ಗಾವಣೆ ಹಿಂದಿನ ಯಾವ ಸರ್ಕಾರದಲ್ಲೂ ಆಗಿಲ್ವೇ?: ಶಿವರಾಜ ತಂಗಡಗಿ ಪ್ರಶ್ನೆ

ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಸಾಹಿತಿಗಳ ಸಭೆ ನಡೆಸಲಾಗಿದೆ. ಆ.22ಕ್ಕೆ ಬೆಳಗಾವಿ ವಿಭಾಗ, ಆ.25ಕ್ಕೆ ಮೈಸೂರು ವಿಭಾಗ ಮತ್ತು ಆ.28ರಂದು ಕಲಬುರಗಿ ವಿಭಾಗದಲ್ಲಿ ಸಾಹಿತಿ, ಹಿರಿಯ ಕಲಾವಿದರ ಸಭೆ ನಡೆಸಲಾಗುವುದು. ನ.1ರಿಂದ ಮೂಂದಿನ ವರ್ಷದ ನ.1ರವರೆಗೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಮತ್ತು ಸಂಸ್ಕೃತಿ ಬಿಂಬಿಸುವ ಕನ್ನಡರಥ ರಾಜ್ಯದಲ್ಲಿ ಸಂಚಾರ ಮಾಡಲಿದೆ. ಶಾಲಾ-ಕಾಲೇಜುಗಳಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಸಿದ್ದಾಪುರದಲ್ಲಿ ಏಕೈಕ ಭುವನೇಶ್ವರಿ ದೇವಾಲಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಕನ್ನಡದ ಮಾಹಿತಿಯನ್ನೊಳಗೊಂಡ ಸಂಚಾರಿ ವಾಹನ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ ಸೇರಿದಂತೆ ಹಲವು ಸಲಹೆಗಳು ಬಂದಿವೆ. ಸಾಹಿತಿಗಳಾದ ಪ್ರೊ.ಎಸ್‌.ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು, ಮನುಬಳಿಗಾರ್‌ ಸೇರಿದಂತೆ ಹಲವು ಮಂದಿ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಉಳಿದ ಮೂರು ವಿಭಾಗಗಳ ಸಭೆ ನಡೆಸಿ ಎಲ್ಲರ ಸಲಹೆಗಳನ್ನು ಪಡೆದುಕೊಳ್ಳಲಾಗುವುದು. ಎಲ್ಲವನ್ನೂ ಕ್ರೋಢೀಕರಣ ಮಾಡಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗುವುದು ಎಂದರು.

ಸಭೆಯಲ್ಲಿ ಮಾಜಿ ಸಚಿವೆ ಉಮಾಶ್ರೀ, ವಿಧಾನಪರಿಷತ್‌ ಮಾಜಿ ಸದಸ್ಯೆ ಜಯಮಾಲಾ, ಸಾಹಿತಿಗಳಾದ ಚಂದ್ರಶೇಖರ್‌, ಬಿ.ಟಿ.ಲಲಿತಾನಾಯಕ್‌, ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು, ಟಿ.ಎನ್‌.ಸೀತಾರಾಮ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ಸೇರಿದಂತೆ ಇತರರು ಭಾಗಿಯಾಗಿದ್ದರು.

ಜಾತಿವಾರು ವರದಿ ಜಾರಿಯಿಂದ ಅಸಮಾನತೆ ನಿವಾರಣೆ: ಸಚಿವ ತಂಗಡಗಿ

ರವೀಂದ್ರ ಕಲಾಕ್ಷೇತ್ರದಲ್ಲಿ ನಾಡದೇವಿಯ ಪ್ರತಿಮೆ

ಬೆಂಗಳೂರು: ರವಿಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ.

ಸುಮಾರು ಮೂರು ಕೋಟಿ ರು. ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿವೆ. ಭುವನೇಶ್ವರಿ ಪ್ರತಿಮೆಯು ಕುಳಿತಿರುವ ಭಂಗಿಯನ್ನು ನಿರ್ಮಾಣವಾಗಲಿದೆ ಎಂದರು.