•    ದೇಶೀ ಗೋ ತಳಿಯ ಸಂರಕ್ಷಣೆ ಹಾಗೂ ಗೋ ಪೂಜೆಯ ಮಹತ್ವವನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಗುರಿ•    ಅಕ್ಟೋಬರ್‌ 26 ರ ಬಲಿಪಾಡ್ಯಮಿಯಂದು ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ 

ಬೆಂಗಳೂರು ಅ.19: ಸನಾತನ ಹಿಂದೂ ಧರ್ಮದ ಗೋ ಪೂಜಾ ವಿಧಿ-ವಿಧಾನಗಳ ಸಂಪ್ರದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ ಬಲಿ ಪಾಡ್ಯಮಿಯ ಹಬ್ಬದ ದಿನದಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ "ಗೋಪೂಜೆ” ಗೆ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, "ದೇಸೀಯ ಗೋವು ತಳಿಗಳನ್ನು ಸಂರಕ್ಷಣೆ ಮಾಡುವ ದೃಷ್ಟಿಯಿಂದ ಹಾಗೂ ಹಿಂದೂ ಪರಂಪರೆಯ ಸಂಪ್ರದಾಯವನ್ನು ಮುಂದಿನ ಪೀಳಿಗೆಗೂ ಪರಿಚಯ ಮಾಡಿಸುವ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯಾದ್ಯಂತ ವಿಶೇಷವಾಗಿ ಗೋಪೂಜೆಯನ್ನು ನಡೆಸಲಾಗುವುದು. ಈ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಯ ಸಹಯೋಗ ಪಡೆದುಕೊಳ್ಳುವಂತೆಯೂ ಸೂಚಿಸಲಾಗಿದೆ," ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೀಪಾವಳಿ 2022: ಮನೆಯಲ್ಲಿ ಕನಿಷ್ಠ ಇಷ್ಟು ದೀಪ ಹಚ್ಚಬೇಕು.. ಎಷ್ಟು?

ಸಚಿವರ ಸೂಚನೆಯಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಸಚಿವರು, ಹಿಂದಿನ ಕಾಲದಿಂದಲೂ ಹಿಂದೂ ಧರ್ಮದವರು ಗೋಮಾತೆಯನ್ನು ಕಾಲಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ. ದೀಪಾವಳಿಯ ಬಲಿಪಾಡ್ಯಮಿಯ ಶುಭ ಸಂಧರ್ಭದಲ್ಲಿ ಗೋವುಗಳಿಗೆ ವಿಶೇಷ ಆಲಂಕಾರದ ಮೂಲಕ ಅಕ್ಕಿ, ಬೆಲ್ಲ, ಸಿಹಿ ತಿನಿಸುಗಳನ್ನು ನೀಡಿ ಪೂಜಿಸಲಾಗುತ್ತದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಪೂಜೆಯನ್ನು ಬಲಿಪಾಡ್ಯಮಿಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಮತ್ತು ಮಹಾನಗರಗಳಲ್ಲಿ ಈ ಪದ್ದತಿ ಮರೆತು ಹೋಗುತ್ತಿದೆ. ಈ ಹಿನ್ನಲೆಯಲ್ಲಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆ ಎಂದು ತಿಳಿದು ಪೂಜಿಸುವ ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. 

ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ, ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ಕಳೆದ ವರ್ಷ ಆಚರಿಸಿರುವಂತೆ, ಪುಸ್ತಕ ಸಾಲಿನಲ್ಲಿಯೂ 2022ನೇ ಅಕ್ಟೋಬರ್ 26ರಂದು ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೀಪಾವಳಿಯಂದು ಇವುಗಳನ್ನು ನೋಡಿದ್ರೆ ಹಣೆಬರಹವೇ ಬದಲಾಗುತ್ತೆ!

ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ತಿನಿಸಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಸದರಿ ದಿನದಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ " ಗೋಪೂಜೆ ಕಾರ್ಯಕ್ರಮವನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.