ಮೈಸೂರು ವಿಮಾನ ನಿಲಾಣ ಮೇಲ್ದರ್ಜೆಗೇರಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

ಬೆಂಗಳೂರು (ಜು.23): ಮೈಸೂರು ವಿಮಾನ ನಿಲಾಣ ಮೇಲ್ದರ್ಜೆಗೇರಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಇಡುವ ಬಗ್ಗೆ ಒತ್ತಾಯ ಇತ್ತು. 

ಇದನ್ನು ಪರಿಶೀಲಿಸಿದ ಬಳಿಕ ಅವರ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದರು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಇರುವ 240 ಎಕರೆ ಜಮೀನನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಒಪ್ಪಿಗೆ ನೀಡಿದೆ. ನಿಲ್ದಾಣ ಉನ್ನತೀಕರಿಸಲು 9.93 ಕೋಟಿ ರು.ಗಳನ್ನು ನೀಡಲು ಸಭೆಯು ಒಪ್ಪಿಗೆ ಸೂಚಿಸಿದೆ ಎಂದರು.

ಮಲ್ಲೇಶ್ವರಂನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಸ್ಥಾಪನೆ: ಸಚಿವ ಅಶ್ವತ್ಥ ನಾರಾಯಣ

ನಾಲ್ವಡಿ ಹೆಸರು ಅಭಿನಂದನಾರ್ಹ: ಮೈಸೂರು ಸಮೀಪದ ಮಂಡಕಳ್ಳಿಯಲ್ಲಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರನ್ನು ಇಡಲಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಸಂಬಂಧ ಅನುಮೋದನೆ ನೀಡಲಾಗಿದೆ. ಈ ಕುರಿತು ಸಂತಸ ಹಂಚಿಕೊಂಡಿರುವ ಸಂಸದ ಪ್ರತಾಪ ಸಿಂಹ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡುವಂತೆ ಕೋರಿ ಮನವಿ ಸಲ್ಲಿಸಿದ್ದೆ. ಅದನ್ನು ಸಚಿವ ಸಂಪುಟದಲ್ಲಿ ಇಟ್ಟು ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ಪ್ರತಾಪ ಸಿಂಹ ತಿಳಿಸಿದ್ದಾರೆ.

ಕಸ್ತೂರಿ ರಂಗನ್‌ ವರದಿ ವಿರುದ್ಧ ಕೇಂದ್ರಕ್ಕೆ ಮೊರೆ: ವಿವಾದಾತ್ಮಕ ಕಸ್ತೂರಿ ರಂಗನ್‌ ವರದಿಯನ್ವಯ ಪಶ್ಚಿಮಘಟ್ಟಪ್ರದೇಶವನ್ನು ಪರಿಸರ ಸೂಕ್ಷ್ಮವಲಯವನ್ನಾಗಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ವರದಿಯನ್ನು ತಿರಸ್ಕಾರ ಮಾಡುವ ನಿಲುವಿನ ಬಗ್ಗೆ ಕೇಂದ್ರಕ್ಕೆ ತಿಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾವೇರಿಗೆ ಸಿಎಂ ಬೊಮ್ಮಾಯಿ ಬಾಗಿನ, 8 ತಿಂಗ್ಳಲ್ಲಿ 2ನೇ ಬಾರಿ ಅರ್ಪಿಸಿರುವುದು ವಿಶೇಷ

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಕಸ್ತೂರಿ ರಂಗನ್‌ ವರದಿಗೆ ರಾಜ್ಯ ಸರ್ಕಾರವು ವಿರೋಧ ಮಾಡಿಕೊಂಡು ಬಂದಿದೆ. ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ವರದಿಯನ್ನು ತಿರಸ್ಕಾರ ಮಾಡಿದ್ದೇವೆ. ಈಗ ಪರಿಸರ ಇಲಾಖೆಯಿಂದ ಅಧಿಸೂಚನೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರಕ್ಕೂ ಮನವರಿಕೆ ಮಾಡಿಕೊಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು. ವರದಿಯಿಂದ ಪಶ್ಚಿಮಘಟ್ಟದ ಜನತೆಗೆ ಇದರಿಂದ ಅನ್ಯಾಯವಾಗಲಿದೆ. ಈಗಾಗಲೇ ಎರಡು ಬಾರಿ ಸರ್ಕಾರ ಆಕ್ಷೇಪಣೆ ಸಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿರುವ ಜನರು ಮತ್ತು ಜನವಸತಿ ಪ್ರದೇಶಗಳನ್ನು ಎತ್ತಂಗಡಿ ಮಾಡುವುದು ಸರಿಯಲ್ಲ. ಕೇಂದ್ರಕ್ಕೆ ಸಮಗ್ರವಾಗಿ ಮಾಹಿತಿ ನೀಡಲಾಗುವುದು ಎಂದರು.