ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಖಚಿತ. ಸರ್ಕಾರ ಪತನವಾದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ದೂರಿದ್ದಾರೆ. 

ಹುಬ್ಬಳ್ಳಿ :  ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ದೂರಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಸಮ್ಮಿಶ್ರ ಸರ್ಕಾರದ ಪತನ ಖಚಿತ. ಲೋಕಸಭೆ ಚುನಾವಣೆವರೆಗೂ ಕಾಂಗ್ರೆಸ್‌ಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಈ ಸರ್ಕಾರ ನಡೆಸಬೇಕಿದೆ. 

ಹೀಗಾಗಿ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್‌ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಅವರೇ ಚುನಾವಣೆವರೆಗೂ ಅನುಸರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ. ಈ ಸರ್ಕಾರ ಕಾಂಗ್ರೆಸ್‌ ಹೈಕಮಾಂಡ್‌ ಪಾಲಿಗೆ ಎಟಿಎಂ ಇದ್ದಂತೆ ಎಂದರು.

ಅವಿಶ್ವಾಸ 6ಕ್ಕೆ ನಿರ್ಧಾರ : ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಬೇಕೋ ಬೇಡವೋ? ಅಧಿವೇಶನದಲ್ಲಿ ನಮ್ಮ ಹೋರಾಟ ಯಾವ ರೀತಿ ಇರಬೇಕೆಂಬುದನ್ನು ಫೆ. 6ರಂದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗುವುದು. ಸಭೆಯಲ್ಲಿ ಪಕ್ಷದ ನಾಯಕರು ಯಾವ ರೀತಿ ನಿರ್ಧಾರ ಕೈಗೊಳ್ಳುತ್ತಾರೋ ಆ ರೀತಿ ನಡೆದುಕೊಳ್ಳುತ್ತೇವೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದರು.

ಆರ್ಥಿಕ ಸ್ಥಿತಿ ಸರಿ ಇಲ್ಲ: ರಾಜ್ಯದ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಹದಗೆಟ್ಟಿದೆ. ರಾಜ್ಯದ ಯಾವ ಯೋಜನೆಗೂ ಹಣ ಬಿಡುಗಡೆ ಮಾಡುತ್ತಿಲ್ಲ. 80 ಸಾವಿರ ಕೋಟಿ ರು. ಸಾಲ ಪಡೆಯಲು ಯತ್ನಿಸುತ್ತಿದ್ದಾರೆ. ಬಾಂಡ್‌ಗಳ ರೂಪದಲ್ಲಿ . 1500 ಕೋಟಿ ಸಾಲ ಪಡೆದಿದೆ. ರಾಜ್ಯದ ಸಾಲವನ್ನು .5 ಲಕ್ಷ ಕೋಟಿ ಮಾಡುವ ತರಾತುರಿಯಲ್ಲಿದ್ದಾರೆ. ಸರ್ಕಾರ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಸಾಲ ಎತ್ತುವ ಕೆಲಸ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ಆರೋಪಿಸಿದರು.

ನೋವಾಗಿದ್ದರೆ ಹೊರಬನ್ನಿ: ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ ಶಾಸಕರಾರ‍ಯರು ಮುಖ್ಯಮಂತ್ರಿ ಎಂದು ಒಪ್ಪಿಕೊಂಡಿಲ್ಲ. ಸಿದ್ದರಾಮಯ್ಯ ಅವರೇ ತಮ್ಮ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್‌ ಶಾಸಕರ ಪಾಲಿಗೆ ಮುಖ್ಯಮಂತ್ರಿಯಾದರೆ ಕುಮಾರಸ್ವಾಮಿ ಯಾರು? ಕಾಂಗ್ರೆಸ್‌ ಶಾಸಕರ ಹೇಳಿಕೆಯಿಂದ ಕುಮಾರಸ್ವಾಮಿಗೆ ನೋವಾಗಿದ್ದೇ ಖರೆಯಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಲಿ. ರಾಜೀನಾಮೆ ಕೊಡುತ್ತೇನೆ ಎಂದು ನಾಟಕ ಮಾಡುವುದು ಬೇಡ ಎಂದು ಸವಾಲು ಹಾಕಿದರು.