ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ  ರಾಜ್ಯ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.

ಬೆಳಗಾವಿ, (ಜುಲೈ.28): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

Add Asianetnews Kannada as a Preferred SourcegooglePreferred

885.80 ಕೋಟಿ ರೂ. ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಅಲ್ಲದೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ಕೊಟ್ಟಿದ್ದು, 791.50 ಕೋಟಿ ರೂ ಮೊತ್ತದ ಯೋಜನೆ ಇದಾಗಿದೆ.

ಕೇಂದ್ರ- ರಾಜ್ಯ ಸರ್ಕಾರದ ನಡೆಗೆ ಖಂಡನೆ: ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ

ಈ ಎರಡೂ ಯೋಜನೆಗಳ ಕಾಮಗಾರಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಮೊದಲು ಆರ್ಥಿಕ ಇಲಾಖೆಯ ಮೂರ್ವಾನುಮೋದನೆ ಪಡೆಯಬೇಕು ಎಂದು ಒಪ್ಪಿಗೆ ಆದೇಶದಲ್ಲಿ ತಿಳಿಸಲಾಗಿದೆ.

ಸಿಎಂಗೆ ರಮೇಶ್ ಜಾರಕಿಹೊಳಿ ಅಭಿನಂದನೆ
ಮಹತ್ವಾಕಾಂಕ್ಷೆಯ ಈ ಕಳಸಾ - ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಜಾರಕಿಹೊಳಿ ಹೇಳಿದರು.