ರಾಜ್ಯದ 215 ಕೈಗಾರಿಕಾ ಪ್ರದೇಶಗಳ ಮಾಲಿನ್ಯದ ಬಗ್ಗೆ ಐಐಎಸ್ಸಿ ಮತ್ತು ಐಐಟಿ ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೈಗಾರಿಕೆಗಳ ಸ್ಥಾಪನೆಯ ನಂತರದ ಪರಿಣಾಮಗಳ ಪರಿಶೀಲನೆ ಅಗತ್ಯವೆಂದು ಅವರು ಪ್ರತಿಪಾದಿಸಿದರು. ನೆಲ, ಜಲ, ವಾಯು ಮತ್ತು ಕೃಷಿಯ ಮೇಲಿನ ಪರಿಣಾಮಗಳನ್ನು ಅಧ್ಯಯನ ಮಾಡಲು ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯು ಕಾಲಮಿತಿಯಲ್ಲಿ ವರದಿ ಸಲ್ಲಿಸಲಿದೆ.

ಬೆಂಗಳೂರು (ಏ.07): ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಕೈಗಾರಿಕೆಗಳಿಂದ ಉಂಟಾಗುತ್ತಿರುವ ವಿವಿಧ ರೀತಿಯ ಮಾಲಿನ್ಯ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಐಐಟಿ ತರಹದ ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಅವರು ಸೋಮವಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಕೈಗಾರಿಕಾ ಸಚಿವ ಪಾಟೀಲ ಅವರು, ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯಮ‌ ನಡೆಸಲು ಅನುಮತಿ ನಡೆಸುವಾಗ ಸರಕಾರವು ಹಲವು ಮಾನದಂಡಗಳನ್ನು ನೀಡಿರುತ್ತದೆ. ಆದರೆ ನಂತರದ ದಿನಗಳಲ್ಲಿ ಏನಾಗುತ್ತದೆ ಎನ್ನುವುದರ ಪರಿಶೀಲನೆ‌ ಕೂಡ ಅಗತ್ಯ. ಉದ್ಯಮಗಳನ್ನು ಬೆಳೆಸುವ ಜೊತೆಯಲ್ಲೇ ನಾವು ನೆಲ, ಜಲ, ವಾಯು, ಕೃಷಿ ಮತ್ತು ಮನುಷ್ಯರ ಮೇಲಾಗುತ್ತಿರುವ ಪರಿಣಾಮಗಳನ್ನೂ ಅಧ್ಯಯನ ಮಾಡಿ, ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾಯ್ಕೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಎಂ.ಬಿ.ಪಾಟೀಲ್

ಈ‌ ನಿಟ್ಟಿನಲ್ಲಿ ಕೈಗಾರಿಕಾ ಮಾಲಿನ್ಯ ಕುರಿತು ಉನ್ನತ ಮಟ್ಟದ ತಂಡಗಳಿಂದ ಅಧ್ಯಯನ ನಡೆಸಲಾಗುವುದು. ಈ ತಂಡಗಳು ಎಲ್ಲಾ ಕೈಗಾರಿಕಾ ಪ್ರದೇಶಗಳಿಗೂ ಖುದ್ದು ಭೇಟಿ ನೀಡಲಿವೆ. ಜತೆಗೆ ಮಾಲಿನ್ಯದ ತೀವ್ರತೆ ಆಧರಿಸಿ, ಆಯಾ ಉದ್ಯಮಗಳು ಯಾವ ಬಗೆಯ ಪರಿಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನೂ ಈ ಸಮಿತಿಯೇ ತಿಳಿಸಲಿದೆ. ಈ ಉದ್ದೇಶಕ್ಕಾಗಿ ಸೂಕ್ತ ಸಂಸ್ಥೆಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ತಂಡಗಳು ನಿರ್ದಿಷ್ಟ ಕಾಲಮಿತಿಯಲ್ಲಿ ತಮ್ಮ ವರದಿ ಸಲ್ಲಿಸುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಸಚಿವರ ತಾಂತ್ರಿಕ ಸಲಹೆಗಾರ ಡಾ.ಅರವಿಂದ ಗಲಗಲಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.