ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಉಂಟಾಗಿದ್ದ ಮಳೆ ಕೊರತೆ ಕ್ರಮೇಣ ಕಡಿಮೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಮಳೆ ವಾಡಿಕೆಗಿಂತ ಶೇ.9 ರಷ್ಟು ಹೆಚ್ಚಾಗಿದೆ.

ಬೆಂಗಳೂರು (ಜು.25): ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಉಂಟಾಗಿದ್ದ ಮಳೆ ಕೊರತೆ ಕ್ರಮೇಣ ಕಡಿಮೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಮಳೆ ವಾಡಿಕೆಗಿಂತ ಶೇ.9 ರಷ್ಟು ಹೆಚ್ಚಾಗಿದೆ. ಜೂನ್‌ ಆರಂಭದಿಂದ ಜು.23ರ ವರೆಗೆ 388.3 ಮಿ.ಮೀ. ನಷ್ಟು ಮಳೆಯಾಗಬೇಕಿತ್ತು. ಆದರೆ, 425 ಮಿ.ಮೀ. ನಷ್ಟು ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವಾಡಿಕೆ ಪ್ರಕಾರ ಈವರೆಗೆ 189 ಮಿ.ಮೀ. ಮಳೆಯಾಗಬೇಕಿತ್ತು. 234 ಮಿ.ಮೀ. ಮಳೆಯಾಗಿದ್ದು, ಶೇ.24 ರಷ್ಟು ಹೆಚ್ಚಿನ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಈವರೆಗೆ ವಾಡಿಕೆ ಪ್ರಕಾರ 128 ಮಿ.ಮೀ. ನಷ್ಟು ಮಳೆ ಸುರಿಯಬೇಕಿತ್ತು. ಆದರೆ, 217 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.4ರಷ್ಟು ಮಳೆ ಕೊರತೆ ಉಂಟಾಗಿದೆ. ಈ ಹಿಂದಿನ ವಾರಗಳಿಗೆ ಹೋಲಿಕೆ ಮಾಡಿದರೆ ಮಳೆ ಕೊರತೆ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Add Asianetnews Kannada as a Preferred SourcegooglePreferred

3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ: ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಒಂದು ವಾರ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಾರುತಗಳು ವ್ಯಾಪಕವಾಗಿರುವುದರಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಮುಂದಿನ ಮೂರು ದಿನಕ್ಕೆ ಆರೆಂಜ್‌ ಅಲರ್ಟ್‌, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ದಾವಣಗೆರೆ, ಮೈಸೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಜು. 27ರವರೆಗೆ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಮುದ್ರ, ನದಿ ತೀರದ ಮತ್ತು ತಗ್ಗುಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಮನೆ ಸಂಪೂರ್ಣ ನಾಶ:

ಕೆಲವು ದಿನಗಳಿಂದ ಬಿಡದೆ ಜಿಲ್ಲೆಯಾದ್ಯಂತ ಉತ್ತಮ ಮಳ‍ೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆಯಾಗಿದೆ. ಇದರಿಂದ ಒಂದು ಮನೆ ಸಂಪೂರ್ಣ ನಾಶವಗಿದ್ದು ಮತ್ತು 5 ಮನೆಗಳಿಗೆ ಸಾಕಷ್ಟು ಹಾನಿಯಾಗಿದೆ. ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ರಾಘವೇಂದ್ರ ಜೋಗಿ ಅವರ ಮನೆ ಮಳೆಯಿಂದ ಸಂಪೂರ್ಣ ಕುಸಿದಿದ್ದು ಅವರಿಗೆ ಸುಮಾರು 10 ಲಕ್ಷ ರು. ನಷ್ಟ ಸಂಭವಿಸಿದೆ. ಗಂಗೊಳ್ಳಿ ಗ್ರಾಮದ ರೇಖಾ ಖಾರ್ವಿ ಮನೆಗೆ ಗಾಳಿ, ಮಳೆಯಿಂದ 2,50,000 ರು., ಕಾಪು ತಾಲೂಕಿನ ನಡ್ಸಾಲು ಗ್ರಾಮದ ಸೂರ್ಯಪ್ರಕಾಶ್ ಮನೆಗೆ ಮಳೆಯಿಂದ 1,00,000 ರು.ಗಳಷ್ಟು ನಷ್ಟವಾಗಿದೆ.

ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮಹಮದ್ ಜುಬೇರ್ ಅವರ ಮನೆ ಗೋಡೆ ಕುಸಿದು 15,000 ರು., ಹಾರ್ದಳ್ಳಿ ಮಂಡಳಿ ಗ್ರಾಮದ ಭಾರತಿ ಭುಜಂಗ ಶೆಟ್ಟಿ ಅವರ ಮನೆ ಮಳೆಯಿಂದ ಭಾಗಶಃ ಹಾನಿ 25,000 ರು. ಬೈಂದೂರು ತಾಲೂಕಿನ ಹೆರೂರು ಗ್ರಾಮದ ನೀಲು ಮೊಗವೀರ ಅವರ ಮನೆ ಗೋಡೆ 35,000 ರು., ಕಸಬಾ ನಿವಾಸಿ ರಾಧಾ ಬಿ. ಚಂದನ್ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು 30,000 ರು.ಗಳಷ್ಟು ನಷ್ಟವಾಗಿದೆ. ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಲಚ್ಚ ಅವರ ಮನೆಗೆ ಹೊಂದಿಕೊಂಡು ಇರುವ ದನದ ಕೊಟ್ಟಿಗೆ ಹಾನಿಯಾಗಿ 21,000 ರು. ನಷ್ಟವಾಗಿದೆ.