ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ತೂಫಾನ್‌ನಿಂದಾಗಿ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆಗಳಲ್ಲಿ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳಲ್ಲಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಬಾಗಲಕೋಟೆ ಜಿಲ್ಲೆಗೂ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

Add Asianetnews Kannada as a Preferred SourcegooglePreferred

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಳೆ ಹಾಗೂ ಬಿರುಗಾಳಿ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಮನವಿ ಮಾಡಿದೆ.

ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿನ ನಿರಂತರ ಮಳೆಯಿಂದಾಗಿ ಸಾಮಾನ್ಯ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಇದ್ದು, ಭಾರೀ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅರಬ್ಬೀ ಸಮುದ್ರದಲ್ಲಿ ತೂಫಾನ್ – ಮೀನುಗಾರರ ಕಷ್ಟ ಹೆಚ್ಚಳ

ಭಾರೀ ಮಳೆಯ ನಡುವೆ ಅರಬ್ಬೀ ಸಮುದ್ರದಲ್ಲಿ ತೂಫಾನ್ ಉಂಟಾಗಿ ಕರಾವಳಿ ಪ್ರದೇಶಗಳಲ್ಲಿ ಅಪಾಯ ಹೆಚ್ಚಿದೆ. ಕಾರವಾರ ಬಂದರಿನಲ್ಲಿ ನೂರಾರು ಪರ್ಸೀನ್ ಹಾಗೂ ಟ್ರಾಲ್ ಬೋಟ್‌ಗಳು ಲಂಗರು ಹಾಕಿಕೊಂಡಿವೆ. ಆಗಸ್ಟ್ ತಿಂಗಳಲ್ಲಿ ಮೀನುಗಾರಿಕೆ ಪ್ರಾರಂಭವಾದ ಬಳಿಕ ಈಗಾಗಲೇ ಎರಡನೇ ಬಾರಿ ತೂಫಾನ್‌ನ ಹೊಡೆತಕ್ಕೆ ಮೀನುಗಾರರು ಸಿಲುಕಿದ್ದಾರೆ.

ಮೀನುಗಾರರಿಗೆ ಬಂದಿರುವ ಸಂಕಷ್ಟ

ನಿನ್ನೆ ರೆಡ್ ಅಲರ್ಟ್ ಇದ್ದರೆ, ಇಂದು ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ, ಈ ಹಿಂದೆ ಆಳ ಸಮುದ್ರಕ್ಕೆ ತೆರಳಿದ್ದ ಕೆಲ ಮೀನುಗಾರರ ಬೋಟ್‌ಗಳು ಇನ್ನೂ ಇತರ ಜಿಲ್ಲೆ ಮತ್ತು ರಾಜ್ಯಗಳ ಬಂದರುಗಳಲ್ಲಿ ಲಂಗರು ಹಾಕಿಕೊಂಡಿವೆ.

ಇನ್ನೊಂದೆಡೆ, ಸಮುದ್ರದ ಅಲೆಗಳ ಅಬ್ಬರದಿಂದ ಈವರೆಗೆ ಹಲವಾರು ದುರಂತಗಳು ವರದಿಯಾಗಿವೆ. ಮೂರು ಮೀನುಗಾರರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಹಿಂದೆ ನಡೆದ ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದರೂ, ನಾಲ್ವರು ನಾಪತ್ತೆಯಾಗಿದ್ದರು. ಅವರಲ್ಲಿ ಒಬ್ಬರ ಮೃತದೇಹ ಪತ್ತೆಯಾದರೆ, ಮೂವರು ಇನ್ನೂ ಪತ್ತೆಯಾಗಿಲ್ಲ. ಮೊನ್ನೆ ರಾತ್ರಿ ಕೂಡ ಒಬ್ಬ ಮೀನುಗಾರ ಬೋಟ್‌ನಿಂದ ಬಿದ್ದು ನಾಪತ್ತೆಯಾಗಿದ್ದಾನೆ.

ಆಗಸ್ಟ್ – ಮೀನುಗಾರರಿಗೆ ಸಂಕಷ್ಟದ ತಿಂಗಳು

ಸಾಮಾನ್ಯವಾಗಿ ಆಗಸ್ಟ್ ತಿಂಗಳು ಮೀನುಗಾರರಿಗೆ ಹೆಚ್ಚಿನ ಲಾಭ ನೀಡುವ ಕಾಲವೆಂದು ಪರಿಗಣಿಸಲಾಗುತ್ತದೆ. ಆದರೆ, ಈ ವರ್ಷ ನಿರಂತರ ಮಳೆ ಹಾಗೂ ಸಮುದ್ರದ ಅಲೆಗಳ ಅಬ್ಬರದಿಂದಾಗಿ ಮೀನುಗಾರರು ನಷ್ಟದ ಮೇಲೆ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

ಸರ್ಕಾರದಿಂದ ಪರಿಹಾರಕ್ಕೆ ಆಗ್ರಹ

ಮೀನುಗಾರರ ಜೀವಹಾನಿ ಹಾಗೂ ಬೋಟ್‌ಗಳ ನಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೀನುಗಾರರ ಸಂಘಟನೆಗಳು ಸರ್ಕಾರದಿಂದ ಹೆಚ್ಚಿನ ಪರಿಹಾರ ಒದಗಿಸಲು ಆಗ್ರಹಿಸಿವೆ. ಮೃತರ ಕುಟುಂಬಗಳಿಗೆ ತಕ್ಷಣದ ಆರ್ಥಿಕ ನೆರವು ನೀಡಬೇಕು ಮತ್ತು ಸಮುದ್ರಕ್ಕೆ ತೆರಳುವ ಮೀನುಗಾರರಿಗೆ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬೇಡಿಕೆ ಮುಂದಿರಿಸಲಾಗಿದೆ.