ವಿವಾಹವಾಗುವುದಾಗಿ ಯುವತಿಗೆ ಮೋಸ ಮಾಡಿದ್ದ ವ್ಯಕ್ತಿಗೆ ಅದೇ ಹುಡುಗಿಯ ಜೊತೆ ಮದುವೆಯಾಗಲು ಕರ್ನಾಟಕ ಹೈಕೋರ್ಟ್‌ 23 ದಿನ ಜಾಮೀನು ನೀಡಿದೆ. ಕೇಸ್‌ ದಾಖಲು ಬಳಿಕ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತು. 

ಕನ್ನಡಪ್ರಭ ವಾರ್ತೆ ಬೆಂಗಳೂರು (ಏ.3): ವಿವಾಹವಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ ಬಳಿಕ ವಂಚಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂಬ ಷರತ್ತಿನೊಂದಿಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಂಡ್ಯ ಜಿಲ್ಲೆಯ ಹುಲ್ಲಗಾಲದ ಮಹದೇವ ಅಲಿಯಾಸ್‌ ಮಾದೇವ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು ಅರ್ಜಿದಾರನಿಗೆ ಏ.2 ರಿಂದ ಏ.24ರವರೆಗೆ ಜಾಮೀನು ನೀಡಿ ಆದೇಶಿಸಿದೆ.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರನ ಪರ ವಕೀಲರು, ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಆರೋಪ ಸಂಬಂಧ ಅರ್ಜಿದಾರನ ವಿರುದ್ಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಸದ್ಯ ಅರ್ಜಿದಾರರು ಮತ್ತು ದೂರುದಾರರು ಮಾತುಕತೆ ನಡೆಸಿ ರಾಜಿ ಮಾಡಿಕೊಂಡಿದ್ದು, ವಿವಾಹಕ್ಕೆ ಇಬ್ಬರೂ ಒಪ್ಪಿದ್ದಾರೆ. ಆದರೆ, ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಮದುವೆಯಾಗಲು ಅಡ್ಡಿಯಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು.

ಷರತ್ತು ವಿಧಿಸಿದ ಹೈಕೋರ್ಟ್‌

ಈ ಮನವಿ ಪರಿಗಣಿಸಿದ ನ್ಯಾಯಮೂರ್ತಿಗಳು, ವಿಚಿತ್ರ ಸನ್ನಿವೇಶದಲ್ಲಿ ಅರ್ಜಿದಾರನಿಗೆ ಜಾಮೀನು ನೀಡುವುದು ಸೂಕ್ತವೆನಿಸಿದೆ. ಆರೋಪಿಯು ಸಂತ್ರಸ್ತೆಯನ್ನು ವಿವಾಹವಾದ ಬಳಿಕ ಮದುವೆ ನೋಂದಾಯಿಸಿದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಅರ್ಜಿದಾರನಿಗೆ ನಿರ್ದೇಶಿಸಿದ್ದು, ವಿಚಾರಣೆಯನ್ನು ಏ.24ಕ್ಕೆ ಮುಂದೂಡಿದೆ.