ಕೇತಗಾನಹಳ್ಳಿಯ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ತಡೆ ನೀಡಿದ ನ್ಯಾಯಾಲಯ, ತನಿಖಾ ಕ್ರಮಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಬಿಡದಿಯ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನಿನ ಒತ್ತುವರಿ (Kethaganahalli land grab case) ಆರೋಪದ ಸಂಬಂಧ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ಇದೀಗ ಹೈಕೋರ್ಟ್‌ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ (karnataka high court) ಮಧ್ಯಂತರ ತಡೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮೀನಿನ ಒತ್ತುವರಿ ಆರೋಪದ ಕುರಿತು ಸರ್ಕಾರ ಈ ವರ್ಷದ ಜನವರಿ ತಿಂಗಳಲ್ಲಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು. ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದ ಈ ತಂಡ, 6 ಎಕರೆ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕ್ರಮ ಕೈಗೊಂಡಿತ್ತು. ಭೂಮಿ ತೆರವುಗೊಳಿಸುವಂತೆ ತಹಸೀಲ್ದಾರ್‌ನಿಂದ ನೋಟಿಸ್‌ಗಳನ್ನೂ ನೀಡಲಾಗಿತ್ತು.

ಇದಕ್ಕೆ ಪ್ರತಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಎಸ್ಐಟಿ ರಚನೆಯ ನ್ಯಾಯಸಮ್ಮತವಲ್ಲ ಎಂದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರ ಯಾವುದೇ ಅಧಿಸೂಚನೆ ನೀಡದೇ ಎಸ್ಐಟಿ ರಚಿಸಿದ್ದು ಕಾನೂನುಬಾಹಿರ ಎಂದು ಅವರು ವಾದಿಸಿದರು. ಅಲ್ಲದೇ, ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸುವಂತೆ ಮನವಿ ಸಲ್ಲಿಸಿದರು.

ಎಚ್.ಡಿಕೆ ಪರ ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಎ.ವಿ. ನಿಶಾಂತ್ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಎಸ್ಐಟಿಯ ವಿರುದ್ಧ ಮಧ್ಯಂತರ ತಡೆಯಾದೇಶವನ್ನು ನೀಡಿದರು.

ಈ ಮೂಲಕ, ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಕ್ರಮಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ಆದೇಶದ ರೂಪದಲ್ಲಿ ಮಹತ್ತರ ರಿಲೀಫ್ ಲಭಿಸಿದೆ.