ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ದೇಶಾದ್ಯಂತ 'ಹ್ಯೂಮನ್ ಪ್ಯಾಪಿಲೋಮವೈರಸ್' (HPV) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕರ್ನಾಟಕದಲ್ಲಿ 14 ವರ್ಷ ಮೇಲ್ಪಟ್ಟ 1.15 ಕೋಟಿ ಬಾಲಕಿಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆ ಲಭ್ಯವಿದೆ.
ಬೆಂಗಳೂರು (ಫೆ.28): ದೇಶದ ಹೆಣ್ಣುಮಕ್ಕಳ ಮತ್ತು ಮಹಿಳೆಯರ ಆರೋಗ್ಯ ಸಂರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹತ್ತರವಾದ ಹೆಜ್ಜೆಯನ್ನಿಟ್ಟಿವೆ. ಮಹಿಳೆಯರಲ್ಲಿ ಅತಿ ಹೆಚ್ಚು ಕಂಡುಬರುವ ಹಾಗೂ ಮಾರಣಾಂತಿಕವಾಗಬಲ್ಲ ಗರ್ಭಕಂಠ ಕ್ಯಾನ್ಸರ್ (Cervical Cancer) ತಡೆಗಟ್ಟಲು 'ಹ್ಯೂಮನ್ ಪ್ಯಾಪಿಲೋಮವೈರಸ್' (HPV) ಲಸಿಕೆ ನೀಡುವ ಬೃಹತ್ ಅಭಿಯಾನಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ.
ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಇದರ ನೇರ ಪ್ರಸಾರವನ್ನು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೆಬ್ಕ್ಯಾಸ್ಟ್ ಮೂಲಕ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಹಿರಿಯ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಪ್ರಮುಖರು ಭಾಗವಹಿಸಿ, ರಾಜ್ಯದಲ್ಲಿ ಅಭಿಯಾನದ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
1.15 ಕೋಟಿ ಬಾಲಕಿಯರೇ ಗುರಿ:
ರಾಜ್ಯದಲ್ಲಿ 14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಬಾಲಕಿಯರನ್ನು ಈ ಅಭಿಯಾನದ ಅಡಿಯಲ್ಲಿ ಗುರುತಿಸಲಾಗಿದೆ. ಹದಿಹರೆಯದ ಹಂತದಲ್ಲಿಯೇ ಈ ಲಸಿಕೆಯನ್ನು ನೀಡುವುದರಿಂದ ಭವಿಷ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಶೇ. 90ರಷ್ಟು ಕಡಿಮೆ ಮಾಡಬಹುದು ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಎಲ್ಲೆಲ್ಲಿ ಲಸಿಕೆ ಲಭ್ಯ?
- ಸಾರ್ವಜನಿಕರ ಅನುಕೂಲಕ್ಕಾಗಿ ಲಸಿಕೆಯನ್ನು ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಪ್ರಮುಖವಾಗಿ:
- ಆಯುಷ್ಮಾನ್ ಆರೋಗ್ಯ ಮಂದಿರಗಳು (ಪ್ರಾಥಮಿಕ ಆರೋಗ್ಯ ಕೇಂದ್ರಗಳು)
- ಸಮುದಾಯ ಆರೋಗ್ಯ ಕೇಂದ್ರಗಳು
- ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳು
- ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳು
ಈ ಅಭಿಯಾನವು ಸತತವಾಗಿ ಮೂರು ತಿಂಗಳ ಕಾಲ ಸಮರೋಪಾದಿಯಲ್ಲಿ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಬಾಲಕಿಯೂ ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿದೆ.
ಆರೋಗ್ಯ ಇಲಾಖೆಯ ಗಣ್ಯರ ಉಪಸ್ಥಿತಿ:
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಮೆನನ್ ಸೇರಿದಂತೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕರು ಹಾಜರಿದ್ದರು. 'ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಈ ಲಸಿಕೆ ರಾಮಬಾಣವಾಗಲಿದೆ. ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಗಳ ಆರೋಗ್ಯದ ದೃಷ್ಟಿಯಿಂದ ಲಸಿಕೆ ಹಾಕಿಸಬೇಕು' ಎಂದು ಅಧಿಕಾರಿಗಳು ಮನವಿ ಮಾಡಿದರು.
ಕ್ಯಾನ್ಸರ್ ಮುಕ್ತ ಭವಿಷ್ಯದ ಕನಸು:
ಭಾರತದಲ್ಲಿ ಮಹಿಳೆಯರು ಕ್ಯಾನ್ಸರ್ನಿಂದ ಸಾವನ್ನಪ್ಪಲು ಗರ್ಭಕಂಠ ಕ್ಯಾನ್ಸರ್ ಎರಡನೇ ಪ್ರಮುಖ ಕಾರಣವಾಗಿದೆ. ಎಚ್ಪಿವಿ ವೈರಸ್ ಹರಡುವಿಕೆಯನ್ನು ತಡೆಯುವ ಈ ಲಸಿಕೆಯು ಮಹಿಳೆಯರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಆರಂಭದಲ್ಲಿ 14 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಅಭಿಯಾನವನ್ನು ಶಾಲಾ-ಕಾಲೇಜುಗಳ ಮಟ್ಟದಲ್ಲಿ ಇನ್ನೂ ಹೆಚ್ಚಿನ ವಿಸ್ತರಿಸಲು ಸರ್ಕಾರ ಯೋಜಿಸಿದೆ.


