ವಿದ್ಯುತ್‌ ಪ್ರಸರಣ ಜಾಲದಲ್ಲಿ ವಿದ್ಯುತ್‌ ಸೋರಿಕೆ ಅತಿ ಕಡಿಮೆ ಇರುವ ರಾಜ್ಯಗಳಲ್ಲಿ ಕರ್ನಾಟಕ ನಂ.2 ವಿತರಣಾ ಜಾಲದಲ್ಲಿಯೂ ವಿದ್ಯುತ್‌ ಸೋರಿಕೆ ಶೇ.5ಕ್ಕಿಂತ ಕಡಿಮೆಗೊಳಿಸಲು ಸೂಚನೆ ವಿದ್ಯುತ್‌ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್‌ ಪೂರೈಕೆ ಕುರಿತ ಸಭೆಯಲ್ಲಿಸಿಎಂ ಸೂಚನೆ

 ಬೆಂಗಳೂರು (ಜೂ.03):  ವಿದ್ಯುತ್‌ ಪ್ರಸರಣ ಜಾಲದಲ್ಲಿ ವಿದ್ಯುತ್‌ ಸೋರಿಕೆ ಅತಿ ಕಡಿಮೆ, ಅಂದರೆ ಸುಮಾರು ಶೇ.3 ರಷ್ಟುಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ವಿತರಣಾ ಜಾಲದಲ್ಲಿಯೂ ವಿದ್ಯುತ್‌ ಸೋರಿಕೆ ಶೇ.5ಕ್ಕಿಂತ ಕಡಿಮೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ರಾಜ್ಯದ ವಿದ್ಯುತ್‌ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್‌ ಪೂರೈಕೆಗೆ ಸಂಬಂಧಿ​ಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀರ್ಘಾವ​ಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ನೀರಾವರಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಅನುವಾಗುವಂತೆ ಸ್ಟೇಷನ್‌ಗಳು ಹಾಗೂ ಫೀಡರ್‌ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ.

ಸ್ಟಾರ್‌ ಹೋಟೆಲ್‌ಗಳಿಗೆ ಸರ್ಕಾರಿಂದ ಬಂಪರ್ : ವಿದ್ಯುತ್ - ತೆರಿಗೆಗೆ ರಿಯಾಯಿತಿ

ಪ್ರಸ್ತುತ 26 ಸ್ಟೇಷನ್‌ಗಳು ಹಾಗೂ 182 ಫೀಡರುಗಳ ಕಾಮಗಾರಿ ಪೂರ್ಣಗೊಂಡಿದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಬಳಕೆಯ ಶೇ.18 ರಷ್ಟುಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್‌ ಪೂರೈಕೆ ಮಾಡುವಲ್ಲಿ ತಲೆದೋರುವ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಇಲಾಖೆ ಹಾಗೂ ಇಂಧನ ಇಲಾಖೆ ಅಧಿ​ಕಾರಿಗಳು ಕಾಲ-ಕಾಲಕ್ಕೆ ಸಭೆ ನಡೆಸಿ, ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ 30,562.56 ಮೆಗಾವ್ಯಾಟ್‌ನಷ್ಟಿದೆ. ಶೇ.50ರಷ್ಟುನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ. ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟುನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯುತ್‌ ಕೊರತೆಯಾಗದು ಎಂದು ಅ​ಧಿಕಾರಿಗಳು ವಿವರಿಸಿದರು.

ವಿದ್ಯುತ್, ನೀರಿನ ಬಿಲ್‌ ಇಲ್ಲ : ಸಾಲ ವಸೂಲಿಗೂ ಬ್ರೇಕ್‌...

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್‌ ಕುಮಾರ್‌ ಖತ್ರಿ ಮತ್ತು ಇತರರು ಭಾಗವಹಿಸಿದ್ದರು.