ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ, ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡ ಪ್ರಭದ 6 ಪತ್ರಕರ್ತರಿಗೆ ಪ್ರಶಸ್ತಿ!
ಪ್ರತಿಷ್ಠಿತ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದೆ. ಏಷ್ಯಾನೆಟ್ ಸುವರ್ಣನ್ಯೂಸ್ನ ನಾಲ್ವರು ಹಾಗೂ ಕನ್ನಡ ಪ್ರಭದ ಇಬ್ಬರು ಸೇರಿ ಒಟ್ಟು 6 ಮಂದಿಗೆ ಪ್ರಶಸ್ತಿ ಘೋಷಿಸಲಾಗಿದೆ.
ಬೆಂಗಳೂರು(ಫೆ.09): ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದೆ. 2019, 2020, 2021 ಹಾಗೂ 2022ನೇ ಸಾಲಿನ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ವಾರ್ಷಿಕ ಮಾಧ್ಯಮ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಏಷ್ಯಾನೆಟ್ ಸುವರ್ಣನ್ಯೂಸ್ನ ಪ್ರಧಾನ ಸಂಪಾದಕ ಅಜಿತ್ ಹನಮಕ್ಕನವರ್ ಸೇರಿದಂತೆ ನಾಲ್ವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇನ್ನು ಕನ್ನಡ ಪ್ರಭ ದಿನಪತ್ರಿಕೆಯ ಇಬ್ಬರು ಸಾಧಕರ ಹೆಸರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ್, ರಾಜಕೀಯ ವಿಶ್ಲೇಷಕ ಪ್ರಶಾಂತ್ ನಾತು, ಕವರ್ ಸ್ಟೋರಿ ಮುಖ್ಯಸ್ಥ ರವಿಕುಮಾರ್, ಕಲಬುರಗಿ ವರದಿಗಾರ ಶರಣಯ್ಯ ಹೀರೇಮಠ್ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇನ್ನು ಕನ್ನಡ ಪ್ರಭ ದಿನಪತ್ತಿಕೆಯ ವ್ಯಂಗ್ಯಚಿತ್ರಕಾರ ಸುಧಾಕರ್ ದರ್ಬೆ ಹಾಗೂ ಯಾದಗಿರಿಯ ಆನಂದ್ ಸೌದಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಾರ್ಷಿಕ ಪ್ರಶಸ್ತಿಗೆ 124 ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. ಇನ್ನು ದತ್ತಿ ಪ್ರಶಸ್ತಿಗೆ 21 ಪತ್ರಕರ್ಕರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅರ್ಹ ಸಾಧಕರು ಹಾಗೂ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ ವಿಜೇತರಿಗೆ 50,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ. ಇನ್ನು ವಾರ್ಷಿಕ ಪ್ರಶಸ್ತಿ ಪಡೆದ ಸಾಧಕರಿಗೆ ಪ್ರಶಸ್ತಿ ಫಲಕದ ಜೊತೆಗೆ 25,000 ರೂಪಾಯಿ ನಗದು ನೀಡಿ ಗೌರವಿಸಲಾಗುತ್ತದೆ.
ಪ್ರಶಸ್ತಿ ಪ್ರಧಾನ ದಿನಾಂಕ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಇತರ ಸಚಿವರನ್ನು ಆಹ್ವಾನಿಸಲಾಗುತ್ತದೆ ಎಂದು ಸದಾಶಿವ ಶೈಣೈ ಹೇಳಿದ್ದಾರೆ.