ಮದ್ದೂರು ಕಲ್ಲು ತೂರಾಟ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸದೆ ಮನೆಯಲ್ಲಿದ್ದರೆ ಸರ್ಕಾರಕ್ಕೆ ಘಟನೆ ನಿಭಾಯಿಸಲು ಸುಲಭವಾಗುತ್ತದೆ ಎಂದು ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ. 

ಬೆಂಗಳೂರು (ಸೆ.10): ಬಿಜೆಪಿಯವರು ಮದ್ದೂರು ಕಲ್ಲು ತೂರಾಟ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳದೆ ಮನೆಯಲ್ಲಿದ್ದರೆ ಎಲ್ಲವೂ ಸರಿಹೋಗುತ್ತದೆ. ಸರ್ಕಾರವೂ ಘಟನೆಯನ್ನು ಸಮರ್ಪಕವಾಗಿ ನಿಭಾಯಿಸುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಟಾಂಗ್‌ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗಣೇಶೋತ್ಸವದ ವೇಳೆ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ ಮಹದೇವಪ್ಪ, ಯಾರೇ ಈ ಕೃತ್ಯದಲ್ಲಿ ಭಾಗಿಯಾಗಿರಲಿ, ಅದು ಖಂಡನೀಯ. ಧಾರ್ಮಿಕ ಅಥವಾ ಮತೀಯ ಶಕ್ತಿಗಳು ಯಾವುದೇ ಧರ್ಮಕ್ಕೆ ಸೇರಿರಲಿ, ಅಂತಹ ಕೃತ್ಯಗಳನ್ನು ಖಂಡಿಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಆದರೆ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಗಣೇಶ ಚತುರ್ಥಿಯನ್ನು ಬಾಲಗಂಗಾಧರ ತಿಲಕರು ಹಿಂದೂ ಸಂಘಟನೆಗಾಗಿ ಆರಂಭಿಸಿದರು. ಆದರೆ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಇದನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಹದೇವಪ್ಪ ಕಿಡಿಕಾರಿದರು.

ಬಿಜೆಪಿಯವರು ಮದ್ದೂರಿಗೆ ಭೇಟಿ ನೀಡದೆ, ಈ ವಿಷಯವನ್ನು ರಾಜಕೀಯಗೊಳಿಸದೆ ಮನೆಯಲ್ಲಿದ್ದರೆ, ಸರ್ಕಾರಕ್ಕೆ ಈ ಘಟನೆಯನ್ನು ಶಾಂತಿಯುತವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಮಹದೇವಪ್ಪನವರ ಹೇಳಿಕೆಯಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ರಾಜಕೀಯ ಚಕಮಕಿ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ.