ರಾಜ್ಯಾದ್ಯಂತ ಒಂದು ವಾರಗಳವರೆಗೆ ಮಳೆ ಪ್ರಮಾಣ ತಗ್ಗಿದ್ದು, ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬಿತ್ತನೆ ಕಾರ್ಯಕ್ಕೆ ಸಕಾಲವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರು (ಜೂ.16): ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಯಾವುದೇ ಭರ್ಜರಿ ಮಳೆಯಾಗುವ ಮುನ್ಸೂಚನೆ ಇಲ್ಲ. ಆದರೆ, ಕರಾವಳಿ ಜಿಲ್ಲೆಗಳ ಕೆಲವು ಭಾಗದಲ್ಲಿ ಮಾತ್ರ ಜೂ.16ರಿಂದ ಜೂ.21ರವರೆಗೆ ಹಗುರವಾಗಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮಳೆ ಬಿದ್ದು ತಗ್ಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯಕ್ಕೆ ಇದು ಸಕಾಲವಾಗಿದೆ ಎಂದು ತಿಳಿದುಬಂದಿದೆ. ಉತ್ತ ಕರ್ನಾಟಕ ಹಲವು ಭಾಗಗಳಲ್ಲಿ ಈಗಾಗಲೇ ಬಿತ್ತನೆ ಕಾರ್ಯಗಳು ಚುರುಕುಗೊಂಡಿವೆ.

Add Asianetnews Kannada as a Preferred SourcegooglePreferred

ಮುಂದಿನ ಏಳು ದಿನಗಳ ಕಾಲ ಕರ್ನಾಟಕಕ್ಕೆ ಮುನ್ಸೂಚನೆಗಳು:

  • ಜೂ.16ರಿಂದ ಜೂ.19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಂಭವಿಸುವ ಸಾಧ್ಯತೆಯಿರುವ ಗಾಳಿ (30-40 kmph)ಗೆ ಸಂಬಂಧಿಸಿದ ಹಗುರ ಮಳೆ/ಗುಡುಗು ಸಹಿತ ಮಳೆಯಾಗಲಿದೆ.
  • ಜೂ.20ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಜೂ.20 ಮತ್ತು ಜೂ.21ರಂದು ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಭಾರೀ ಮಳೆಯಾದರೂ ಕರ್ನಾಟಕದಲ್ಲಿ ಬಿತ್ತನೆ 20% ಕುಂಠಿತ..!

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ: ಬೆಂಗಳೂರು ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21°C ಆಗಿರಬಹುದು ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಬಿತ್ತನೆಗಿದು ಸಕಾಲ: ರಾಜ್ಯಾದ್ಯಂತ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಜೂ.1ರಿಂದ ಆರಂಭವಾಗಿ ಜೂ.14ರವರೆಗೂ ವಿವಿಧೆಡೆ ಭಾರಿ ಮಳೆಯಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಿದ್ದು, ಭೂಮಿ ಬಿತ್ತನೆಗೆ ಅಗತ್ಯವಿರುವ ತೇವಾಂಶವನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಭೂಮಿ ಹದ ಮಾಡಿಕೊಂಡಿದ್ದ ರೈತರು ಈಗ ಬಿತ್ತನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಗಳು ಚುರುಕುಗೊಂಡಿವೆ.

ರೈತರಿಗೆ ಉಪಕಾರಿ, ಬೀಜ-ಗೊಬ್ಬರ ಕಂಪನಿಗಳಿಗೆ ವಂಚಿಸಿದ ವ್ಯಾಪಾರಿ

ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ: 
2024-25ರ ಮುಂಗಾರು ಹಂಗಾಮಿಗೆ 5.52 ಲಕ್ಷ ಕ್ವಿಂಟಾಲ್ ಪ್ರಮಾಣಿತ ಬಿತನೆ ಬೀಜಗಳ ಬೇಡಿಕೆ ಇದ್ದು, ಇಲ್ಲಿಯವರೆಗೆ 0.98 ಲಕ್ಷ ಕ್ವಿಂಟಾಲ್ ಜೂ.7ರವರೆಗೆ ವಿತರಣೆ ಮಾಡಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1.22 ಲಕ್ಷ ಕ್ವಿಂಟಾಲ್ ದಾಸಾನು ಇರುತ್ತದೆ. ಉಳಿಕೆ ದಾಸಾನು ಸಂಬಂಧಿಸಿದ ಸಂಸ್ಥೆಗಳಲ್ಲಿ ಲಭ್ಯವಿರುತ್ತದೆ. ಇನ್ನು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ 26.80 ಲಕ್ಷ ಮೆಟ್ರಿಕ್ ಟನ್ (ಏಪ್ರೀಲ್-ಸೆಪ್ಟೆಂಬರ್ 2024 ರವರೆದು ವಿವಿಧ ರಸಾಯನಿಕ ರಸಗೊಬ್ಬರಗಳ ಬೇಡಿಕೆ ಅಂದಾಜಿಸಿದ್ದು, 21.19 ಲಕ್ಷ ಮೆಟ್ರಿಕ್ ಟನ್ ದಾಸಾನು ಲಭ್ಯವಿದ್ದು, 6.85 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿದ್ದು, 14.33 ಲಕ್ಷ ಮೆಟ್ರಿಕ್ ಟನ್ ಉಳಿಕೆ ದಾಸಾನು ಇರುತ್ತದೆ ಎಂದು ರಾಜ್ಯ ಕೃಷಿ ಇಲಾಖೆ ಮಾಹಿತಿ ನೀಡಿದೆ.