ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್‌ ಕಾವೇರಿ ನೀರು ಹರಿಸುವ ಸಿಡಬ್ಲ್ಯುಆರ್‌ಸಿ ಆದೇಶವನ್ನು ಅಸಂಬದ್ಧ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ. ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು (ಸೆ.9): ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್‌ ಕಾವೇರಿ ನದಿ ನೀರು ಹರಿಸುವಂತೆ ಸಿಡಬ್ಲ್ಯುಆರ್‌ಸಿ ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಇದರ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಚಿಂತನೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಸಿಡಬ್ಲ್ಯುಆರ್‌ಸಿ ಇದು ಅಸಂಬದ್ಧ ಆದೇಶ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ವಾಸ್ತವ ಸ್ಥಿತಿ ಬಗ್ಗೆ ಪ್ರಬಲ ವಾದ ಮಂಡಿಸಿದ್ದಾರೆ. ಸಭೆಯಲ್ಲಿ ತಮಿಳುನಾಡು ನಿತ್ಯ 17 ಸಾವಿರ ಕ್ಯುಸೆಕ್‌ ನೀರಿಗೆ ಬೇಡಿಕೆ ಇಟ್ಟಿತ್ತು. ಆದರೆ, ಸಿಡಬ್ಲ್ಯುಆರ್‌ಸಿ ಪ್ರತಿದಿನ 6 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ನಮಗೆ ಆದೇಶಿಸಿದೆ. ಇದು ಅಸಂಬದ್ಧ ಆದೇಶವಾಗಿದೆ. ಕಳೆದ ಒಂದು ವಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಅಸಾಧ್ಯ. ನಾವು ನೀರು ಹರಿಸುವುದನ್ನು ತಡೆಯಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ದೆಹಲಿಯಲ್ಲಿ ಆಡಳಿತ ನಡೆಸೋರಿಗೆ ಸ್ಥಳೀಯ ವಾಸ್ತವ ಸ್ಥಿತಿ ಏನು ಗೊತ್ತು?

ದೆಹಲಿಯಲ್ಲಿ ಕುಳಿತು ಆಡಳಿತ ನಡೆಸುವವರಿಗೆ ಸ್ಥಳೀಯ ವಾಸ್ತವ ಸ್ಥಿತಿ ಅರ್ಥವಾಗುತ್ತಿಲ್ಲ. ಈ ಹಿಂದೆಯೂ ವಾಸ್ತವ ಪರಿಸ್ಥಿತಿ ಅರಿಯದೇ ಆದೇಶಗಳನ್ನು ನೀಡಲಾಗಿತ್ತು. ನೀರು ಬಿಡುಗಡೆ ಆದೇಶದ ಕುರಿತಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಬುಧವಾರವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.